ತುಮಕೂರು : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮುಂದಿನ ಬಜೆಟ್ನಲ್ಲಿ ಮತ್ತೆ ₹1 ಸಾವಿರ ಹೆಚ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಭರವಸೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್) ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗೌರವ ಧನ ಹೆಚ್ಚಳದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಚರ್ಚಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಯರು, ಸಹಾಯಕಿಯರಲ್ಲಿ ಶೇ.70ರಷ್ಟು ಮಂದಿ ಗೃಹಲಕ್ಷ್ಮಿ ನೆರವು ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ನಲ್ಲಿ 30 ಸಾವಿರದಿಂದ 5 ಲಕ್ಷದ ವರೆಗೆ ಸಾಲ ವಿತರಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಅಲ್ಲದೆ, ಹಿಂದಿನ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಇದೆ. ಆದಷ್ಟು ಶೀಘ್ರ ಬಿಡುಗಡೆ ಮಾಡಲಾಗುವುದು. ಇದಕ್ಕಾಗಿ ತಿಂಗಳಿಗೆ ₹2,500 ಕೋಟಿ ಬೇಕಾಗುತ್ತದೆ. ಕಾಲ ಕಾಲಕ್ಕೆ ಫಲಾನುಭವಿಗಳಿಗೆ ಯೋಜನೆಯ ನೆರವು ಕಲ್ಪಿಸಲಾಗುತ್ತಿದೆ. ಇನ್ನು, ನ.28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅಕ್ಕ ಪಡೆ, ಸಹಕಾರ ಬ್ಯಾಂಕ್ಗೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

