ನೆಲ್ಯಾಡಿ, ಮೇ 10 : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಬೈಕ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 10ರಂದು ನಡೆದಿದೆ.
ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸರಫಾ ಆಗಿರುವ ಸದಾನಂದ ಆಚಾರ್ (55) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಬೈಕ್ನಲ್ಲಿದ್ದ ಅವರ ಪತ್ನಿ ಉಷಾ ಆಚಾರ್ಯ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳಿಗೆ ನೆರವಾಗಲು ಧಾವಿಸಿದ್ದು, ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

