ಕುಂದಾಪುರ, ಮೇ. 25 : ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ವ್ಯಾಪ್ತಿಯಲ್ಲಿ ಮೇ 17 ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೇರಳದ ಇಬ್ಬರು ಮಹಿಳಾ ಯಾತ್ರಿಕರು ಮೃತಪಟ್ಟಿದ್ದರು. ಈ ಘಟನೆಯ ಬೆನ್ನಲ್ಲೇ, ಮೃತ ಮಹಿಳೆಯೊಬ್ಬರ ದೇಹದಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಪಘಾತದ ಸ್ಥಳದಿಂದ ಮೃತರೊಬ್ಬರು ಧರಿಸಿದ್ದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಶ್ರೀಕುಮಾರ್ ಎಂಬುವರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಮತ್ತು ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಕೊಲ್ಲೂರು ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ ನೇತೃತ್ವದ ಪೊಲೀಸ್ ತಂಡವು ತನಿಖೆ ಕೈಗೊಂಡಿತ್ತು. ಈ ತಂಡದಲ್ಲಿ ಹೆಡ್ ಕಾನ್ಸ್ಟೆಬಲ್ಗಳಾದ ನಾಗೇಂದ್ರ, ಲಕ್ಷ್ಮಣ್ ಗಾಣಿಗ, ರಾಘವೇಂದ್ರ ಮತ್ತು ಪೊಲೀಸ್ ಕಾನ್ಸ್ಟೆಬಲ್ ನಾಗರಾಜ್ ಇದ್ದರು.
ಅಪಘಾತದ ಸ್ಥಳದಲ್ಲಿ ಸಾರ್ವಜನಿಕರು ತೆಗೆದಿದ್ದ ಫೋಟೋಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪ್ರಕರಣ ದಾಖಲಾದ 24 ಗಂಟೆಗಳ ಒಳಗೆ ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಹೇಮಂತ್ (40) ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ಪೊಲೀಸರು ಕಳವು ಮಾಡಲಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು ರೂ. 57,000 ಮೌಲ್ಯದ 3.910 ಗ್ರಾಂ ತೂಕದ ಚಿನ್ನದ ಉಂಗುರ, ಸುಮಾರು ರೂ. 50,000 ಮೌಲ್ಯದ 3.450 ಗ್ರಾಂ ತೂಕದ ಚಿನ್ನದ ಬಳೆ, ಸುಮಾರು ರೂ. 1 ಲಕ್ಷ ಮೌಲ್ಯದ 7.160 ಗ್ರಾಂ ತೂಕದ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

