ಬೆಳ್ತಂಗಡಿ, ಆ. 18 : ಇಂದಬೆಟ್ಟು ಗ್ರಾಮದ ಬೊಳ್ಳುರು ನದಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ 2 ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡಿರುವ ಘಟನೆ ಆ.18 ರಂದು ನಡೆದಿದೆ.
ಪೊಲೀಸರಿಗೆ ಲಭಿಸಿದ್ದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ತಂಡ, ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟಕ್ಕೆ ಸಿದ್ಧವಾಗಿದ್ದ ಟಿಪ್ಪರ್ಗಳನ್ನು ವಶಕ್ಕೆ ಪಡೆದರು. ವಶಪಡಿಸಿಕೊಂಡ ವಾಹನಗಳ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಾಹನಗಳ ಮಾಲೀಕರು ಮತ್ತು ಚಾಲಕರ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ರಮ ಮರಳುಗಾರಿಕೆ ನಡೆಸಿದವರು ತಾಲೂಕಿನ ಕಾಂಗ್ರೆಸ್ ನಾಯಕರ ಆಪ್ತರು ಎಂದು ತಿಳಿದು ಬಂದಿದೆ.
ಬೊಳ್ಳುರು ನದಿ ಪಾತ್ರದಲ್ಲಿ ಕಳೆದ ಕೆಲವು ದಿನಗಳಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಘಟನೆಯ ಬಗ್ಗೆ ಮತ್ತಷ್ಟು ತನಿಖೆ ಮುಂದುವರೆದಿದೆ.




