ಬಂಟ್ವಾಳ, ಜು. 20 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ವಿಟ್ಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣ ಮತ್ತು ಅವರ ಸಿಬ್ಬಂದಿ ಒಂದು ಮಗು ಸೇರಿದಂತೆ ಮೂವರನ್ನು ರಕ್ಷಿಸಿದ್ದಾರೆ.
ಅಪಘಾತದ ನಂತರ ಕಾರಿನಲ್ಲಿ ಮಗು, ಮಹಿಳೆ ಮತ್ತು ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು. ಎಸ್ಐ ರಾಮಕೃಷ್ಣ ಅವರು ಸಮಯಪ್ರಜ್ಞೆ ಮತ್ತು ಧೈರ್ಯ ಪ್ರದರ್ಶಿಸಿ ಅಳುತ್ತಿದ್ದ ಪುಟ್ಟ ಮಗುವನ್ನು ತಮ್ಮ ಕೈಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದ ದೃಶ್ಯ ಸಮೀಪದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಅದನ್ನು ಕಂಡ ಸಾರ್ವಜನಿಕರು ಪೊಲೀಸ್ ಅಧಿಕಾರಿಯ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಕ್ಷಣದ ರಕ್ಷಣಾ ಪ್ರಯತ್ನಗಳಿಂದಾಗಿ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇಂತಹ ಅಧಿಕಾರಿಗಳೇ ಪೊಲೀಸ್ ಇಲಾಖೆಯ ಹೆಮ್ಮೆ”, “ಕರ್ತವ್ಯಕ್ಕಿಂತ ಮಾನವೀಯತೆಯನ್ನು ಮೊದಲಿಗಾಗಿಟ್ಟ ಅಧಿಕಾರಿ”, “ಸಮಯೋಚಿತ ಕಾರ್ಯದಿಂದ ಅಮೂಲ್ಯ ಜೀವಗಳನ್ನು ಉಳಿಸಿದ ನಿಜವಾದ ಜನಸೇವಕ” ಎಂಬ ಪ್ರಶಂಸೆಯ ಮಾತುಗಳು ವ್ಯಾಪಕವಾಗಿ ಹರಿದಾಡುತ್ತಿವೆ.
ಎಸ್ಐ ರಾಮಕೃಷ್ಣ ಹಾಗೂ ಸಿಬ್ಬಂದಿ ಕರಣಾಕರ ಅವರ ಕರ್ತವ್ಯನಿಷ್ಠೆ, ಮಾನವೀಯತೆ ಮತ್ತು ಕ್ಷಿಪ್ರ ಕಾರ್ಯಾಚರಣೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗುತ್ತಿದೆ.


