ಕಕ್ಕಿಂಜೆ, ಫೆ. 02 : ಮನೆಗೆ ತೆರಳಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದವರಿಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯ ನಿವಾಸಿಗಳಾದ ಉಮೇಶ(49) ಹಾಗೂ ಸೀನಪ್ಪ ಪೂಜಾರಿ(60) ಗಾಯಗೊಂಡಿದ್ದು, ಇಬ್ಬರೂ ಸಂಬಂಧಿಕರಾಗಿದ್ದಾರೆ.
ಇಬ್ಬರು ಕಕ್ಕಿಂಜೆಯ ಆಯಿಲ್ ಮಿಲ್ ಬಳಿ ರವಿವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಗೆ ತೆರಳಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಹರ್ಷನ್ ಮನೋಜ್ ಎಂಬಾತ ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಇಬ್ಬರಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಇಬ್ಬರು ಕೂಡ ಕಾರಿನ ಮುಂದಿನ ಗಾಜಿಗೆ ಬಿದ್ದು ಪಕ್ಕದ ಕಚ್ಚಾ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಸೀನಪ್ಪ ಅವರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಮೇಶ್ ಅವರ ಎಡಕಾಲು, ತಲೆ, ಎಡಗೈಗೆ ಗುದ್ದಿದ ಗಾಯವಾಗಿದ್ದು, ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಮೇಶ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

