ಚಾರ್ಮಾಡಿ, ಜೂ. 12 : ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಬಂಡೆಯೊಂದು ಕುಸಿದು ರಸ್ತೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆ ಕುಸಿದು ರಸ್ತೆಗೆ ಬಿದ್ದಿದೆ ಎನ್ನಲಾಗಿದೆ. ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಘಾಟಿ ಪ್ರದೇಶದಲ್ಲಿ ಭೂಮಿಯ ತೇವಾಂಶ ಹೆಚ್ಚಾದ ಕಾರಣದಿಂದ ಬಂಡೆ ಕುಸಿದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ರಸ್ತೆಯಲ್ಲಿ ವಾಹನ ಸಂಚಾರಕ್ಕೂ ಯಾವುದೇ ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು, ಮಳೆಗಾಲದಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರಕ್ಕೆ ಅಲ್ಪ-ಸ್ವಲ್ಪ ತೊಡಕಾಗುವುದರಿಂದ ಪ್ರಯಾಣಿಕರು ಹೆಚ್ಚಿನ ಜಾಗೃತೆ ವಹಿಸಬೇಕಾಗಿದೆ. ಅಲ್ಲದೆ, ಕಾಡಾನೆ – ಚಿರತೆಯೂ ಘಾಟ್ ರಸ್ತೆ ಭಾಗದಲ್ಲಿ ಬೀಡು ಬಿಟ್ಟಿರುವುದರಿಂದ ಅಲ್ಲಲ್ಲಿ ವಾಹನಗಳನ್ನು ಪಾರ್ಕ್ ಮಾಡದಂತೆಯೂ ಕೂಡಾ ಎಚ್ಚರ ವಹಿಸುವುದು ಅನಿವಾರ್ಯ.


