ಬೆಂಗಳೂರು, ಜೂ. 12 : ಹಲವಾರು ಸಮಯ ಇಡೀ ದೇಶದೆಲ್ಲೆಡೆ ಬಹಳಷ್ಟು ಚರ್ಚೆಗೀಡಾಗಿದ್ದ ಧರ್ಮಸ್ಥಳ ಗ್ರಾಮದ ಬುರುಡೆ ಗ್ರಾಮ ಇದೀಗ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಬುರುಡೆ ಪ್ರಕರಣದ ತನಿಖಾ ವರದಿ ಬಹಿರಂಗಪಡಿಸುವಂತೆ ಕೋರಿ ಚಿನ್ನಯ್ಯ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರ ಮತ್ತು ಎಸ್ಐಟಿಗೆ ಗುರುವಾರ ನೋಟಿಸ್ ಜಾರಿಗೊಳಿಸಿದೆ.
ಇದೇ ವೇಳೆ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ವಿರುದ್ಧ ನಟ ಪ್ರಕಾಶ್ ರಾಜ್, ಗಿರೀಶ್ ಮಟ್ಟಣ್ಣವರ್ ಮತ್ತಿತರರು ಸುಮಾರು 200 ಕೋಟಿ ರೂ. ಷಡ್ಯಂತ್ರ ರೂಪಿಸಿದ್ದರು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಆದರೆ ಪ್ರಕಾಶ್ ರಾಜ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಪ್ರಕಾಶ್ ರಾಜ್ ಮತ್ತಿತರರ ಷಡ್ಯಂತ್ರ !
ಅರ್ಜಿದಾರ ಚಿನ್ನಯ್ಯ 21 ನೇ ಅಂಶದಲ್ಲಿ ಈ ಬಗ್ಗೆ ವಿವರಿಸಿದ್ದು, ಅರ್ಜಿದಾರರನ್ನು ಕೇರಳದ ಮುಡಾಯಿಕಲ್ ದೇವಸ್ಥಾನಕ್ಕೆ ಹಾಗೂ ನಂತರ ಒಂದು ರೆಸಾರ್ಟ್ಗೆ ಕರೆದೊಯ್ದರು. ಅಲ್ಲಿ ಅವರು 2 ದಿನ ತಂಗಿದರು. ಒಂದು ರಾತ್ರಿ ಸುಮಾರು 8 ಗಂಟೆಗೆ ಗಿರೀಶ್ ಮಟ್ಟಣ್ಣವರ್ ನಟ ಪ್ರಕಾಶ್ ರಾಜ್ ಅವರಿಗೆ ಕರೆ ಮಾಡಿ, ಅರ್ಜಿದಾರರಿಗೆ ಫೋನ್ ನೀಡಿದರು. ಪ್ರಕಾಶ್ ರಾಜ್ ಅವರು ತಮಿಳಿನಲ್ಲಿ ಮಾತನಾಡಿ, ಗಿರೀಶ್ ಮಟ್ಟಣ್ಣವರ್ ಹೇಳಿಕೊಟ್ಟಂತೆ ಅಧಿಕಾರಿಗಳ ಮುಂದೆ ಹೇಳಿಕೆ ನೀಡಬೇಕೆಂದು ಮತ್ತು ತಾವು 29 ನೇ ತಾರೀಕಿಗೆ ಬಂದು ಅಪ್ಪಿಕೊಳ್ಳುವುದಾಗಿ ಹೇಳಿದರು ಎಂದು ಅರ್ಜಿದಾರರು ತಿಳಿಸಿದ್ದಾರೆ.
ಪ್ರಕಾಶ್ ರಾಜ್ ಸ್ಪಷ್ಟನೆ ಏನು?
ನಟ ಪ್ರಕಾಶ್ ರಾಜ್ ಈ ಆರೋಪವನ್ನು ತಳ್ಳಿಹಾಕಿದ್ದು, ಸಾಮಾಜಿಕ ಜಾಲತಾಣ x ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಎಲ್ಲರಿಗು ನಮಸ್ಕಾರ.. ಮಾಧ್ಯಮಗಳಲ್ಲಿ… ಸಾಮಾಜಿಕ ಜಲತಾಣಗಳಲ್ಲಿ ಧರ್ಮಸ್ಥಳ ಪ್ರಕರಣದ ಕುರಿತಂತೆ ನನ್ನ ಬಗ್ಗೆ ಕೆಲವು ಸುದ್ದಿ ಚರ್ಚಿಸಲ್ಪಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅತಿ ಸೂಕ್ಷ್ಮವಾದ ಮತ್ತು ಕೋಟ್ಯಾಂತರ ಭಕ್ತರ ನಂಬಿಕೆಗೆ ಧಕ್ಕೆ ತಂದಿರುವ ಪ್ರಕರಣವಾಗಿರುವುದರಿಂದ, ಈ ರೀತಿಯ ಅನುಮಾನಗಳಿಗೆ ಉತ್ತರಿಸಬೇಕಾಗಿರುವುದು ನನ್ನ ಕರ್ತವ್ಯವೂ ಆಗಿದೆ. ನಾನು ದೂರದೂರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮುಖೇನ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿ ಮಾತುಗಳನ್ನು ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ” ಎಂದಿದ್ದಾರೆ.
ಅರ್ಜಿದಾರರ ಪರ ವಕೀಲರು, ‘‘ನಿಜವಾದ ಆರೋಪಿಗಳನ್ನು ಹೆಸರಿಸಿದ್ದರೂ ಎಸ್ಐಟಿ ಕ್ರಮ ಕೈಗೊಂಡಿಲ್ಲ. ಪ್ರಾಥಮಿಕ ವರದಿಯಲ್ಲಿರುವವರ ಮೇಲೆ ಸರಿಯಾದ ತನಿಖೆ ನಡೆದಿಲ್ಲ. ಇಷ್ಟು ದಿನಗಳಾದರೂ ಎಸ್ಐಟಿ ಎಫ್ಐಆರ್ ಸಂಖ್ಯೆ 39/2025ರ ತನಿಖೆ ಪೂರ್ಣಗೊಳಿಸಿಲ್ಲ. ಹಾಗಾಗಿ, ಎಸ್ಐಟಿ ಹಾಗೂ ಸರಕಾರಕ್ಕೆ ನಿರ್ದೇಶನ ನೀಡಬೇಕು,’’ ಎಂದು ಕೋರಿದರು.
ಅರ್ಜಿಯಲ್ಲಿ ಏನೇನು ಉಲ್ಲೇಖ?
- ವಿಠಲ್ಗೌಡ ತಮ್ಮನ್ನು (ಚಿನ್ನಯ್ಯ) ಮಹೇಶ್ ಶೆಟ್ಟಿ ತಿಮರೋಡಿಗೆ ಪರಿಚಯಿಸಿದರು. ಧರ್ಮಸ್ಥಳದಲ್ಲಿ ಅನೇಕ ಶವಗಳನ್ನು ದಹನ ಮಾಡಲಾಗಿದೆ ಎಂದಿದ್ದರು. ನಂತರ ಗಿರೀಶ್ ಮಟ್ಟೆಣ್ಣನವರ್, ವಿಠಲ್ಗೌಡ, ಗಣೇಶ್ ಮತ್ತಿತರರು ಕೇರಳ, ತಮಿಳುನಾಡು ಸೇರಿ ಹಲವೆಡೆ ಕರೆದೊಯ್ದರು.
- ಆಗಿಂದಾಗ್ಗೆ 5 ಸಾವಿರ, 15 ಸಾವಿರ ಹಣ ನೀಡುತ್ತಿದ್ದರು. ಬೆಂಗಳೂರಿನ ಜಯಂತ್ ಮನೆಗೆ ಕರೆದೊಯ್ದು ತಲೆ ಬುರುಡೆ ಕೊಟ್ಟು ಕೈಯಲ್ಲಿ ಹಿಡಿದುಕೊಳ್ಳುವಂತೆ ಸೂಚಿಸಿ ಫೋಟೊ ತೆಗೆದುಕೊಂಡರು. ನಂತರ ಸುಜಾತಾ ಭಟ್ರೊಂದಿಗೆ ಮಟ್ಟಣ್ಣನವರ್ ತಮ್ಮನ್ನೂ ಸುಪ್ರೀಂಕೋರ್ಟ್ಗೆ ಕರೆದೊಯ್ದರು.
- ನಂತರ ಉಜಿರೆಯಲ್ಲಿ ತಿಮರೋಡಿ ನಿವಾಸದಲ್ಲಿ ಕೂಡಿ ಹಾಕಲಾಗಿತ್ತು. ಸಂಜೆ ವೇಳೆ ಮಟ್ಟೆಣ್ಣನವರ್ ಮತ್ತು ತಿಮರೋಡಿ ಅವರಿಗೂ ಮಸಾಜ್ ಮಾಡಲು ಒತ್ತಾಯಿಸಲಾಗುತ್ತಿತ್ತು. ವಕೀಲರು ಹೇಳಿದಂತೆ ಕೋರ್ಟ್ಗೆ ಹೇಳದಿದ್ದರೆ ಕೊಂದು ಅದೇ ಜಾಗದಲ್ಲಿ ಹೂಳುವುದಾಗಿ ಬೆದರಿಸಿದ್ದರು.
- ಸಮೀರ್ಎಂ.ಡಿ. ಅಜಯ್ ಅವರ ಯೂಟ್ಯೂಬ್ ಚಾನಲ್ಗಳಲ್ಲಿ ಅವರ ಸೂಚನೆಯಂತೆ ಹೇಳಿಸಿ ರೆಕಾರ್ಡ್ ಮಾಡಿಸಲಾಯಿತು. ತಲೆ ಬುರುಡೆ ನೀಡಿ ಪೊಲೀಸರಿಗೆ ದೂರು ಕೊಟ್ಟ ಬಳಿಕ ಕೇರಳದ ರೆಸಾರ್ಟ್ಗೆ ಕರೆದೊಯ್ದರು. ಅಲ್ಲಿ ನಟ ಪ್ರಕಾಶ್ ರಾಜ್ಗೆ ಕರೆ ಮಾಡಿ ಫೋನ್ ನೀಡಿದರು. ಪ್ರಕಾಶ್ ರಾಜ್ ತಮಿಳಿನಲ್ಲಿ ಮಾತನಾಡಿ ಮಟ್ಟೆಣ್ಣನವರ್ ಹೇಳಿಕೊಟ್ಟಂತೆ ಹೇಳಿಕೆ ನೀಡಬೇಕು ಎಂದಿದ್ದರು.
- ತಿಮರೋಡಿ ಹಾಗೂ ಮಟ್ಟಣ್ಣನವರ್ ಬಂಗಲೆಗುಡ್ಡದ ಸ್ಥಳ ಗುರುತಿಸಿ ಅಲ್ಲಿಉತ್ಖನನ ನಡೆಸಿ ಸರಕಾರದ ಹಣ ವ್ಯಯ ಮಾಡಿಸುವಂತೆ ಸೂಚಿಸಿದರು. ಯೋಜನೆಯ ಬಜೆಟ್ 200 ಕೋಟಿ ರೂ. ಇದ್ದು, ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳುಹಿಸಲು ಸಹಕರಿಸಿದರೆ 50 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು.
- ತಿಮರೋಡಿ, ಮಟ್ಟೆಣ್ಣನವರ್, ವಿಠಲ್ಗೌಡ, ಜಯಂತ್, ಯೂಟ್ಯೂಬರ್ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಅವರು ಹೇಳಿದ ಜಾಗಗಳನ್ನು ಎಸ್ಐಟಿಗೆ ತೋರಿಸುವಂತೆ ಸೂಚಿಸಿ ಹಾಗೆ ಮಾಡದಿದ್ದರೆ ತಮ್ಮ ಪತ್ನಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಧರ್ಮಸ್ಥಳದ ವಿರುದ್ಧ ಅವರ ಷಡ್ಯಂತ್ರದಿಂದ ಭೀತನಾಗಿ ಸತ್ಯ ಹೇಳಲು ತೀರ್ಮಾನಿಸಿದೆ. ನಂತರ ಎಸ್ಐಟಿ ಮುಂದೆ ಷಡ್ಯಂತ್ರದ ಹೇಳಿಕೆ ನೀಡಿದೆ.


