ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಟಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಇಂದಿನ ಕಾರ್ಯಕ್ರಮಕ್ಕೆ ದ್ವಿ ಚಕ್ರ ವಾಹನದಲ್ಲಿ ಆಗಮಿಸುವವರಿಗಾಗಿ ಕಾಂಗ್ರೆಸ್ ನಾಯಕರಿಂದ ಪ್ರತಿ ಬೈಕ್ಗೆ 2 ಲೀಟರ್ ಉಚಿತ ಪೆಟ್ರೋಲ್ ವಿತರಣೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉಚಿತ ಪೆಟ್ರೋಲ್ ಭಾಗ್ಯ ನೀಡುತ್ತಿರುವ ಹಿನ್ನಲೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಜಮಾಯಿಸುತ್ತಿದ್ದಾರೆ. ಇನ್ನು, ಉಚಿತ ಪೆಟ್ರೋಲ್ ಪಡೆಯಲು ಸ್ಥಳದಲ್ಲಿ ದೀರ್ಘ ಸಾಲುಗಳು ಕಾಣಿಸಿಕೊಂಡಿವೆ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ 11.30ಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಶಿಡ್ಲಘಟ್ಟ ತಾಲೂಕಿನ ಹನುಮಂತಪುರಕ್ಕೆ ಆಗಮಿಸಿದ್ದು, ಹಲವು ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

