ಕಾರ್ಕಳ, ಫೆ. 10 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 25 ರಂದು ಕಿಸಾನ್ ಸಭಾಂಗಣದ ಉದ್ಘಾಟನೆಗಾಗಿ ಕಾರ್ಕಳಕ್ಕೆ ಆಗಮಿಸಲಿದ್ದಾರೆ. ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಫೆ. 9ರಂದು ನಡೆದ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು, ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿಯವರ ಮುಂದಾಳತ್ವದಲ್ಲಿ ನಿರ್ಮಾಣವಾದ ಕಿಸಾನ್ ಸಭಾದ ಸಭಾಂಗಣ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಕಳಕ್ಕೆ ಆಗಮಿಸುತ್ತಿದ್ದಾರೆ. ಇದೊಂದು ಹೆಮ್ಮೆಯ ಕ್ಷಣವಾಗಿರಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿಕೊಂಡರು.
ಶಿಕ್ಷಣದಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆಂದೇ ಅಂದು ಕಿಸಾನ್ ಸಭಾ ಶಾಲೆಯನ್ನು ಸ್ಥಾಪಿಸಲಾಗಿತ್ತು. ಅದೇ ಸಭಾಂಗಣದಲ್ಲಿ ರೈತರ ಪರ ಹೋರಾಟ, ಚಟುವಟಿಕೆ ನಡೆಯುತ್ತಿತ್ತು. ಇದೀಗ ನೂತನವಾಗಿ ಕಿಸಾನ್ ಸಭಾದ ಸಭಾಂಗಣವು ನಿರ್ಮಾಣವಾಗಿದ್ದು ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕರಾದ ಶೇಖರ ಮಡಿವಾಳ ಹೇಳಿದರು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ಜನಪರ ಯೋಜನೆಗಳ ಮೂಲಕ ಜನಮನವನ್ನು ಗೆದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಕಳಕ್ಕೆ ಆಗಮಿಸುತ್ತಿರುವುದು ಅತ್ಯಂತ ಸಂತಸ ಮತ್ತು ಹೆಮ್ಮೆಯ ವಿಚಾರ. ಮಾನ್ಯ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ನಾವೆಲ್ಲರೂ ಉತ್ಸುಕರಾಗಿದ್ದೇವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪೀನಾಥ್ ಭಟ್, ಜಿಲ್ಲಾ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಬ್ಲಾಕ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ತಲಿನೊ, ಅಬ್ದುಲ್ ಸಾಣೂರು, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಭಾನು ಭಾಸ್ಕರ್ ಪೂಜಾರಿ, ಮಲಿಕ್ ಅತ್ತೂರು, ಸಿರಿಯಣ್ಣ ಶೆಟ್ಟಿ, ಕೆ.ಎಂ.ಎಫ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ, ಶೇಖ್ ಶಭೀರ್ ಮಿಯ್ಯಾರು ವಂದಿಸಿದರು.


