ಲಕ್ನೋ, ಮೇ 25 : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳಿಗೆ ಕಠಿಣ ಸೂಚನೆಗಳನ್ನು ನೀಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿಗಳ ಬಲಿ (ಕುರ್ಬಾನಿ) ನೀಡಲು ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಿಷೇಧಿತ ಪ್ರಾಣಿಗಳ ಬಲಿಗೆ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಲಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯದ ಉನ್ನತ ಮಟ್ಟದ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಪರಾಮರ್ಶನಾ ಸಭೆಯ ಅಧ್ಯಕ್ಷತೆ ವಹಿಸಿ ವಿಡಿಯೋ ಕಾನ್ಸರೆನ್ಸ್ ಮೂಲಕ ಮಾತನಾಡಿದ ಮುಖ್ಯಮಂತ್ರಿಗಳು, “ಪೂರ್ವ ನಿರ್ಧರಿತ ಮತ್ತು ಗುರುತಿಸಲಾದ ಸ್ಥಳಗಳಲ್ಲಿ ಮಾತ್ರ ಹಬ್ಬದ ಆಚರಣೆಗೆ ಅವಕಾಶ ನೀಡಬೇಕು. ಹಬ್ಬದ ಹೆಸರಿನಲ್ಲಿ ಯಾವುದೇ ಹೊಸ ಸಂಪ್ರದಾಯ ಅಥವಾ ಪದ್ಧತಿಗಳನ್ನು ಆರಂಭಿಸಲು ಬಿಡಬಾರದು” ಎಂದು ಜಿಲ್ಲಾಡಳಿತಗಳಿಗೆ ತಿಳಿಸಿದ್ದಾರೆ.
ರಸ್ತೆ ತಡೆದು ನಮಾಜ್ ಮಾಡುವಂತಿಲ್ಲ
ಸಾಂಪ್ರದಾಯಿಕವಾಗಿ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ನಮಾಜ್ ಪ್ರಾರ್ಥನೆಗೆ ಅವಕಾಶ ಇರಲಿದ್ದು, ಯಾವುದೇ ಕಾರಣಕ್ಕೂ ರಸ್ತೆಗಳನ್ನು ನಿರ್ಬಂಧಿಸಿ ಅಥವಾ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ ರಸ್ತೆಗಳ ಮೇಲೆ ನಮಾಜ್ ಮಾಡಲು ಅನುಮತಿ ನೀಡಬಾರದು ಎಂದು ಸಿಎಂ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಬಲಿ ನೀಡಿದ ನಂತರ ಹೊರಬರುವ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು, ಮಾಂಸದ ಮುಕ್ತ ಮಾರಾಟದ ಮೇಲಿನ ನಿಷೇಧವನ್ನು ಮುಂದುವರಿಸಬೇಕು ಮತ್ತು ಕಾನೂನುಬಾಹಿರ ಕಸಾಯಿಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ. ಕಾನೂನುಬದ್ಧವಾಗಿ ನಡೆಯುತ್ತಿರುವ ಕಸಾಯಿಖಾನೆಗಳೂ ಸಹ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಾಣಿಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಎಚ್ಚರಿಸಿದ್ದಾರೆ.
ಅಲಿಗಢ, ಬಿಜೆರ್, ಸಹರಾನ್ಪುರ, ರಾಂಪುರ ಮತ್ತು ಸಂಭಾಲ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್, ಸ್ಯಾನಿಟೈಸೇಶನ್ ಮತ್ತು ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ಸೂಚಿಸಲಾಗಿದೆ. ಹಿಂದಿನ ವರ್ಷಗಳ ಘಟನೆಗಳನ್ನು ಪರಾಮರ್ಶಿಸಿ, ಶಾಂತಿ ಕದಡುವ ಕಿಡಿಗೇಡಿಗಳನ್ನು ಗುರುತಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಿಎಂ ಆದೇಶಿಸಿದ್ದಾರೆ.
ಇದನ್ನೂ ಓದಿ.

