ಬೆಂಗಳೂರು, ಮೇ 29 : ರಾಜ್ಯದಲ್ಲಿ ಶೋಷಿತ ಸಮುದಾಯದ ಧ್ವನಿಯಾಗಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ, ಪರ್ಯಾಯ ನಾಯಕರಾಗಿ ದಲಿತ ಸಮುದಾಯದ ಹಿರಿಯರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಬೇಕು. ಇಲ್ಲವಾದಲ್ಲಿ ಹೋರಾಟ ರೂಪಿಸುವುದಾಗಿ ದಲಿತ ಸಂಘಟನೆಗಳ ಒಕ್ಕೂಟ ಕಾಂಗ್ರೆಸ್ ಹೈಕಮಾಂಡ್ಗೆ ಎಚ್ಚರಿಸಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ, ಸ್ವಾತಂತ್ರ್ಯ ಕಾಲದಿಂದ ಕಾಂಗ್ರೆಸ್ ದಲಿತರನ್ನು ಮತ ಬ್ಯಾಂಕ್ ಮಾಡಿಕೊಂಡು ಮುಖ್ಯಮಂತ್ರಿ ಸ್ಥಾನ ನೀಡುವಲ್ಲಿ ತಾರತಮ್ಯ ಮಾಡುತ್ತಾ ಬಂದಿದೆ. ಇದೀಗ ದಲಿತ ಸಿಎಂ ಆಯ್ಕೆಗೆ ಪರಿಪಕ್ವ ಕಾಲ ಬಂದಿದ್ದು, ರಾಜ್ಯದಲ್ಲಿ ಅನುಭವಿ ಹಾಗೂ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಜಿ.ಪರಮೇಶ್ವರ್ ಸೇರಿದಂತೆ ಹಲವು ದಲಿತ ನಾಯಕರಿದ್ದು, ಅವರಲ್ಲಿ ಒಬ್ಬರಿಗೆ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದರೂ ರಾಹುಲ್ ಗಾಂಧಿ ಅವರು ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಲು ಬಿಟ್ಟಿಲ್ಲ. ಸಿಎಂ ಸ್ಥಾನಕ್ಕೆ ಖರ್ಗೆ ಒಪ್ಪದಿದ್ದಲ್ಲಿ ಪರಮೇಶ್ವರ್ ಅವರಿಗೆ ಅವಕಾಶ ನೀಡಬೇಕು. ಒಂದೊಮ್ಮೆ ಹೈಕಮಾಂಡ್ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿದ್ದಲ್ಲಿ ಹೋರಾಟ ರೂಪಿಸುವುದರ ಜೊತೆಗೆ ಮುಂಬರುವ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.


