ಪುತ್ತೂರು, ಜ. 01 : ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಗೆ ದರೋಡೆ ಮಾಡಲು ಯತ್ನ ಮಾಡಿರುವ ಘಟನೆಗೆ ಸಂಬಂಧಪಟ್ಟಂತೆ ಪುತ್ತೂರು ನಗರ ಪೊಲೀಸರು ದಂಪತಿಯನ್ನು ಬಂಧಿಸಿ ಘಟನೆ ವರದಿಯಾಗಿದೆ. ಪುತ್ತೂರು, ಮುಡೂರು ನಿವಾಸಿಯಾದ ಪ್ರಸ್ತುತ ಪಂಜ ಎಂಬಲ್ಲಿ ವಾಸವಿರುವ ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ (25) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ನಿವೃತ್ತ ಪ್ರಾಂಶುಪಾಲರಾಗಿರುವ ಪುತ್ತೂರು ಕಸಬಾ ನಿವಾಸಿ ಎ.ವಿ ನಾರಾಯಣ (84) ಎಂಬವರ ಮನೆಗೆ 2025ನೇ ಡಿ. 17ರಂದು ಮಧ್ಯರಾತ್ರಿ ಸಮಯದಲ್ಲಿ ಯಾರೋ ಅಪರಿಚಿತ ಇಬ್ಬರು ಹೆಲ್ಮೆಟ್ ಧರಿಸಿಕೊಂಡು ಬಂದು, ಹಿಂಬಾಗಿಲ ಮೂಲಕ ಮನೆಯೊಳಗೆ ಪ್ರವೇಶಿಸಿದ್ದಾರೆ. ಮನೆಯೊಳಗೆ ನುಗ್ಗಿದ್ದ ಕಳ್ಳರು ಎ.ವಿ ನಾರಾಯಣ ಹಾಗೂ ಅವರ ಪತ್ನಿಯನ್ನು ಬೆದರಿಸಿ ದರೋಡೆಗೆ ಯತ್ನಿಸಿದ್ದಾರೆ. ಈ ವೇಳೆ ನಡೆದಂತಹ ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದೆ. ಇದೇ ಸಂದರ್ಭದಲ್ಲಿ ನಾರಾಯಣ ಅವರು ಸಹಾಯಕ್ಕಾಗಿ ಜೋರಾಗಿ ಕಿರುಚಿದ ಸಂದರ್ಭ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದರು. ಆದರೆ, ಮನೆಯಿಂದ ಯಾವುದೇ ಬೆಲೆಬಾಳುವ ವಸ್ತುಗಳು ಕಳವಾಗಿಲ್ಲ ಎಂದು ದೂರುದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪುತ್ತೂರು ನಗರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ತಿಕ್ ರಾವ್ ಮತ್ತು ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ ಬಂಧಿತ ದಂಪತಿಗಳಾಗಿದ್ದಾರೆ. ಸದ್ರಿ ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿರುವುದಾಗಿದೆ. ಇನ್ನು, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

