ಚಿಕ್ಕಮಗಳೂರು, ಡಿ. 23 : ಅಮೆರಿಕದ ಅಧ್ಯಕ್ಷ ಟ್ರಂಪ್ ಪ್ರಪಂಚಕ್ಕೆ ಏನೋ ಮಾಡಲು ಹೊರಟು ಒದ್ದಾಡುತ್ತಿದ್ದಾರೆ. ಇಲ್ಲಿ ಕುರ್ಚಿ ಕದನ ಮಾಡುತ್ತಿರುವವರು ಅಲ್ಲಿಗೆ ಹೋಗಿ ಅವರಿಗೆ ಸಹಕಾರ ನೀಡಿದರೆ ಒಳ್ಳೆಯದು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಬಾಳೆಹೊನ್ನೂರಿನ ಸೀಗೋಡು ಗ್ರಾಮದಲ್ಲಿ ನಡೆದ ಕಾಫಿ ಸಂಶೋಧನಾ ಕೇಂದ್ರದ 100ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ಈ ವೇಳೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇವರ ಜೊತೆ ಮಾತನಾಡಿದ್ದಾರಂತಲ್ಲ. 45 ದಿನ ಕಾದು ನೋಡೋಣ ಎಂದರು. ಸಿಎಂ ನೋಡಿದರೆ, ಮುಂದಿನ ಮೂರು ಬಜೆಟ್ಗಳನ್ನು ತಾನೇ ಮಂಡಿಸುವುದಾಗಿ ಹೇಳುತ್ತಿದ್ದಾರೆ. ಸದ್ಯಕ್ಕೆ ಅವರೇ ಅಧಿಕಾರದಲ್ಲಿ ಇರುವುದರಿಂದ ಅದನ್ನು ನೋಡೋಣ ಎಂದರು. ಸದನದ ಕಲಾಪದಲ್ಲಿ ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡದೆ ಹತ್ತಾರು ಬಿಲ್ಗಳನ್ನು ಚರ್ಚೆಯಿಲ್ಲದೆಯೇ ಅಂಗೀಕರಿಸಲಾಗಿದೆ ಎಂದು ದೂರಿದರು. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಈಗಲೇ ಹೆಚ್ಚೇನೂ ಮಾತನಾಡುವುದಿಲ್ಲ. ಸೂಕ್ತ ಸಮಯ ಬಂದಾಗ ಎಲ್ಲವನ್ನೂ ದಾಖಲೆ ಸಮೇತ ಬಹಿರಂಗಪಡಿಸುತ್ತೇನೆ ಅದಕ್ಕೆ ಕಾಲ ಕೂಡಿ ಬರಬೇಕು ಎಂದರು.


