ಹೊಸದಿಲ್ಲಿ, ಮೇ 27 : ಕಾಂಗ್ರೆಸ್ ಹೈಕಮಾಂಡ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ. ಬಹುತೇಕ, ಸಿದ್ದರಾಮಯ್ಯನವರು ರಾಜೀನಾಮೆ ನೀಡುವುದು ಖಚಿತ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಇನ್ನೊಂದು ಪ್ರಮುಖ ನಿರ್ಧಾರವನ್ನು ರಾಹುಲ್ ಗಾಂಧಿ ತೆಗೆದುಕೊಂಡಿದ್ದಾರೆ ಎಂದು ವರದಿಯಾಗುತ್ತಿದೆ.
ಎಐಸಿಸಿ ಮೂಲಗಳ ಪ್ರಕಾರ, ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ರಾಜ್ಯದ ಮತ್ತೋರ್ವ ಪ್ರಮುಖ ನಾಯಕರೊಬ್ಬರಿಗೆ ವಹಿಸಲು ಹೈಕಮಾಂಡ್ ನಿರ್ಧರಿಸಿದೆ. ಸದ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿಯ ಅಧ್ಯಕ್ಷರೂ ಆಗಿದ್ದಾರೆ. ಆಮೂಲಕ, ಜಾತಿ ಸಮೀಕರಣಕ್ಕೆ ಆದ್ಯತೆಯನ್ನು ನೀಡಲು ಕಾಂಗ್ರೆಸ್ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನಲೆಗೆ ಬಂದಾಗಲೆಲ್ಲಾ, ಕೆಪಿಸಿಸಿ ಅಧ್ಯಕ್ಷರ ಹುದ್ದೆಯನ್ನು ಬದಲಾಯಿಸಬೇಕು, ಒಬ್ಬರಿಗೆ ಒಂದೇ ಹುದ್ದೆ ಎನ್ನುವ ನಿಯಮ ಅನ್ವಯವಾಗಬೇಕು ಎನ್ನುವ ಕೂಗು ಜೋರಾಗುತ್ತಿತ್ತು. ಹಲವು ನಾಯಕರ ಹೆಸರು ಕೂಡಾ ಮುನ್ನಲೆಗೆ ಬಂದಿತ್ತು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಹೆಸರು ಹೆಚ್ಚು ಚರ್ಚೆಯಲ್ಲಿತ್ತು. ಜೊತೆಗೆ, ಸಿದ್ದರಾಮಯ್ಯನವರ ಆಪ್ತ ಬಣದಲ್ಲಿ ಇದ್ದವರ ಹೆಸರೂ ಮುನ್ನಲೆಗೆ ಬಂದಿತ್ತು. ಮೂಲಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ, ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಆದ ಬೆನ್ನಲ್ಲೇ, ಕೆಪಿಸಿಸಿಗೆ ನೂತನ ಸಾರಥಿಯ ಹೆಸರನ್ನು ರಾಹುಲ್ ಗಾಂಧಿ ಪ್ರಕಟಿಸಲಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಮೂಲಗಳ ಪ್ರಕಾರ, ರಾಜ್ಯ ಲೋಕೋಪಯೋಗಿ ಇಲಾಖೆಯ ಸಚಿವ ಮತ್ತು ಕಿತ್ತೂರು ಕರ್ನಾಟಕದ ಪ್ರಭಾವೀ ನಾಯಕ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಿಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ವಾಲ್ಮೀಕಿ ಸಮುದಾಯದ ಇವರು, ಸಿದ್ದರಾಮಯ್ಯನವರ ಆಪ್ತ ಕ್ಯಾಂಪಿನವರು. ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಇವರು ಭಾರೀ ಲಾಬಿಯನ್ನೂ ನಡೆಸಿದ್ದರು. ಅಧ್ಯಕ್ಷ ಸ್ಥಾನ ಸಿಕ್ಕಿದರೆ, ಸಚಿವ ಸ್ಥಾನ ಪದತ್ಯಾಗ ಮಾಡಲು ಸಿದ್ದ ಎಂದು ಜಾರಕಿಹೊಳಿ ಹೇಳಿದ್ದರು.
ಗ್ರೇಟರ್ ಬೆಂಗಳೂರು ಚುನಾವಣೆಗೆ ಕಾಂಗ್ರೆಸ್ ಸಜ್ಜು
ಗ್ರೇಟರ್ ಬೆಂಗಳೂರು ಚುನಾವಣೆ ಮತ್ತು ಇನ್ನೆರಡು ವರ್ಷಗಳಲ್ಲಿ ವಿಧಾನಸಭಾ ಚುನಾವಣೆ ಬರುತ್ತಿರುವ ಹೊತ್ತಿನಲ್ಲಿ, ರಾಜ್ಯ ಕಾಂಗ್ರೆಸ್ಸಿನಲ್ಲಿ ಆಯಕಟ್ಟಿನ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಸತೀಶ್ ಜಾರಕಿಹೊಳಿ ಕಣ್ಣಿಟ್ಟಿದ್ದಾರೆ. ಈಗ, ಈ ಗೊಂದಲಕ್ಕೂ ತೆರೆ ಎಳೆಯಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ. ಈ ವಿಚಾರವನ್ನು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಮಂಗಳವಾರ (ಮೇ. 26) ದೆಹಲಿಯಲ್ಲಿ ಮಾತುಕತೆ ನಡೆಸುವ ವೇಳೆ, ಈ ವಿಚಾರವನ್ನು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾವಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್
2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಂತಹ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಲಬಿಸಿತ್ತು. ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಡಿಕೆಶಿ, ಅದು ಆಗದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನೂ ತಮ್ಮಲ್ಲೇ ಉಳಿಸಿಕೊಂಡಿದ್ದರು. ಇದನ್ನು, ಹಲವು ಹಿರಿಯ ಕಾಂಗ್ರೆಸ್ ನಾಯಕರು ವಿರೋಧಿಸಿದ್ದರು. ಆದರೆ, ಇಷ್ಟು ದಿನ ಏನೂ ನಿರ್ಧಾರ ತೆಗೆದುಕೊಳ್ಳದ ಕಾಂಗ್ರೆಸ್ ಹೈಕಮಾಂಡ್, ಸಿಎಂ ಬದಲಾವಣೆಯ ಜೊತೆಗೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯನ್ನೂ ಮಾಡಿ ಮುಗಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಸಿಎಂ ಬದಲಾವಣೆ ಸುಸೂತ್ರವಾಗಿ ಮುಗಿದ ನಂತರ, ಇದರ ಘೋಷಣೆಯಾಗಬಹುದು.

