ಬೆಳ್ತಂಗಡಿ, ಜು. 2 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತುಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಹಿನ್ನೆಲೆ ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆನ್ಲೈನ್ ಮೂಲಕ ಸ್ವಾಸ್ಥ್ಯ ಸಂಕಲ್ಪ ಕಾರ್ಯ ಕ್ರಮ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿ ಮಾತನಾಡಿ, ಯುವಜನತೆ ದುಶ್ಚಟಗಳ ಮೊರೆ ಹೋಗದಂತೆ ಜಾಗ್ರತೆ ವಹಿಸಬೇಕಾದ ಅಗತ್ಯ ಇದೆ. ಪ್ರಜ್ಞಾಪೂರ್ವಕವಾಗಿ ತಪ್ಪುಗಳಾಗದಂತೆ ಜಾಗ್ರತೆ ವಹಿಸಬೇಕು. ದುಶ್ಚಟಗಳು ಬದುಕನ್ನು ಹಾಳು ಮಾಡು ತ್ತವೆ. ಕೆಟ್ಟದ್ದನ್ನು ತಿರಸ್ಕರಿಸುವ ಮನೋ ಭಾವ ನಮ್ಮಲ್ಲಿರಬೇಕು ಎಂದರು.
ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, ಜೀವನದಲ್ಲಿ ಮೌಲ್ಯ, ನೈತಿಕತೆ ಕಳೆದು ಕೊಳ್ಳಬಾರದು. ವಿದ್ಯಾವಂತರಾಗಿ ಇತರರಿಗೆ ಮಾದರಿಯಾಗುವ ರೀತಿ ಬದುಕಬೇಕು ಎಂದರು.
ಬೆಂಗಳೂರಿನ ನಾರಾಯಣ ಹೃದಯಾಲಯದ ಅಧ್ಯಕ್ಷ, ಹೃದಯ ಚಿಕಿತ್ಸಕ ಡಾ| ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಯುವ ಸಮುದಾಯ ಜಾಗೃತ ಮನಸ್ಸನ್ನು ಭವಿಷ್ಯ ರೂಪಿಸಲು ಉಪಯೋಗಿಸಬೇಕು. ಮಾದಕ ವ್ಯಸನಕ್ಕೆ ಬಲಿಯಾಗದೆ ದೇಶದ ಸಂಪನ್ಮೂಲ ವ್ಯಕ್ತಿಗಳಾಗಬೇಕು ಎಂದರು.
ಬೆಂಗಳೂರಿನ ಎಸ್ಪಿ ಡಾ| ಎಚ್. ಎನ್. ವೆಂಕಟೇಶ ಪ್ರಸನ್ನ ಅವರು ಮಾದಕ ವಸ್ತುಗಳ ಬಳಕೆ, ದುರ್ಬಳಕೆ, ದುಷ್ಪರಿಣಾಮ, ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಸ್ವಾಗತಿಸಿ, ಯೋಜನೆಯ ಟ್ರಸ್ಟಿ ಡಾ| ಹರೀಶ್ ಕೃಷ್ಣ ಸ್ವಾಮಿ, ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ್ ಆರ್. ಪೈ, ಪ್ರಾದೇಶಿಕ ನಿರ್ದೇಶಕ ಡಿ. ಜಯರಾಮ್ ಉಪಸ್ಥಿತರಿದ್ದರು.


