ಚುನಾವಣೆಗೆ ಸ್ಪರ್ಧಿಸುವ ಹಂಬಲ – 6 ವರ್ಷದ ಮಗಳನ್ನು ಹತ್ಯೆಗೈದ ಕ್ರೂರಿ ತಂದೆ

ನಿಜಾಮಬಾದ್, ಫೆ. 03 : ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ. ಕೊಲೆಯಾದ ಬಾಲಕಿಯನ್ನು ಪ್ರಾಚಿ (6), ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ.

Advertisement

ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿಯಾಗಿದ್ದಾನೆ. ಆರೋಪಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ನಿಜಾಮಾಬಾದ್ ಪೊಲೀಸರು ಪ್ರಕರಣದ ಆರೋಪಿ ಪಾಂಡುರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಜಾಮಾಬಾದ್ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ, ಕೆಲವು ದಿನಗಳ ಹಿಂದೆ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಇದರಿಂದ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ ಇರುವುದರಿಂದ ಸ್ಪರ್ಧಿಸಲು ಅನರ್ಹನಾಗಿದ್ದ. ಈ ವಿಚಾರವನ್ನು ಸ್ನೇಹಿತ ಮತ್ತು ಗ್ರಾಮದ ಪ್ರಸ್ತುತ ಸರಪಂಚ್ ಗಣೇಶ್ ಶಿಂಧೆ ಜೊತೆ ಚರ್ಚಿಸಿ ಅವಳಿ ಮಕ್ಕಳಲ್ಲಿ ಹಿರಿಯಳಾದ ಪ್ರಾಚಿಯನ್ನು ಎಲ್ಲಾದರೂ ಬಿಟ್ಟು ಬರಲು ಯೋಚಿಸಿದ್ದ. ಬಳಿಕ ಅವಳು ವಾಪಸ್‌ ಬಂದರೆ ತೊಂದರೆ ಆಗುತ್ತದೆ ಎಂದು ಕಾಲುವೆಗೆ ತಳ್ಳಿ ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ್ದ.

ಅಲ್ಲಿಯೇ ಸಮೀಪದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ನೀರಿಗೆ ಏನೋ ಬಿದ್ದ ಶಬ್ಧ ಕೇಳಿ, ಬಂದು ನೋಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯ ಫೋಟೋ ವೈರಲ್‌ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡು, ಆರೋಪಿಗಳನ್ನು ಬಂಧಿಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.