ಹಾಸನ, ಮೇ 16 : ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸೊಂದು ಚಲಿಸುತ್ತಿರುವಾಗಲೇ ದಿಢೀರ್ ಬೆಂಕಿಗಾಹುತಿಯಾದ ಭೀಕರ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ 36 ಮಂದಿ ಪ್ರಯಾಣಿಕರು ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದಾರೆ.
ಶುಕ್ರವಾರ ರಾತ್ರಿ 8.45 ಕ್ಕೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ‘ಭರತ್’ ಹೆಸರಿನ ಖಾಸಗಿ ಬಸ್ ಹಾಸನದ ಶಾಂತಿಗ್ರಾಮ ಸಮೀಪಿಸುತ್ತಿದ್ದಂತೆ ಈ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಸ್ಸಿನ ಟಯರ್ ಏಕಾಏಕಿ ಸ್ಫೋಟಗೊಂಡಿದ್ದು, ಅದರ ತೀವ್ರತೆಗೆ ಕ್ಷಣಾರ್ಧದಲ್ಲಿ ಬಸ್ಸಿಗೆ ಬೆಂಕಿ ಆವರಿಸಿಕೊಂಡಿದೆ ಎನ್ನಲಾಗಿದೆ.
ಚಾಲಕನ ಸಮಯಪ್ರಜ್ಞೆ
ಟಯರ್ ಸ್ಫೋಟಗೊಳ್ಳುತ್ತಿದ್ದಂತೆ ಎಚ್ಚೆತ್ತ ಬಸ್ ಚಾಲಕ, ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಬಸ್ಸಿನಲ್ಲಿದ್ದ ಎಲ್ಲಾ 36 ಪ್ರಯಾಣಿಕರನ್ನು ತಕ್ಷಣವೇ ಕೆಳಗೆ ಇಳಿಯುವಂತೆ ಸೂಚಿಸಿದ್ದಾರೆ. ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು, ಬಸ್ ಸಂಪೂರ್ಣವಾಗಿ ಧಗಧಗನೆ ಹೊತ್ತಿ ಉರಿದಿದೆ.
ಚಾಲಕ ಸಕಾಲದಲ್ಲಿ ನಿರ್ಧಾರ ಕೈಗೊಂಡು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸದಿದ್ದರೆ ದೊಡ್ಡ ಮಟ್ಟದ ಪ್ರಾಣಹಾನಿ ಸಂಭವಿಸುವ ಸಾಧ್ಯತೆಯಿತ್ತು. ಸದ್ಯ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

