ಬೆಳ್ತಂಗಡಿ, ಜ. 02 : ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಇಲಾಖಾ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜ.2 ರಂದು ಬೆಳ್ತಂಗಡಿ ಸಂತೆಕಟ್ಟೆಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.
ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ಅವರು, ಜನರ ಬಳಿಗೆ ತಾಲೂಕು ಆಡಳಿತ ಎಂಬ ಪರಿಕಲ್ಪನೆಯೊಂದಿಗೆ ಕಳೆದ ಮೂರು ತಿಂಗಳಿಂದ ನಿರಂತರವಾಗಿ ಜನಸ್ಪಂದನ ಸಭೆ ನಡೆದಿದ್ದು ಡಿ.31 ರಂದು ಯಶಸ್ವಿಯಾಗಿ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಪೂರ್ಣಗೊಂಡಿದೆ. ಜನರ ಸಮಸ್ಯೆಗಳಿಗೆ ಕಿವಿಯಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಹೇಳಿದರು.
ತಾಲೂಕಿನ ಯಾವುದೇ ಇಲಾಖಾ ಕಚೇರಿಯಲ್ಲಿ ಅಧಿಕಾರಿಗಳಿಗೆ ಚಲಾವಣ ಪುಸ್ತಕ ಇಲ್ಲ. ಜನರು ಇಲಾಖೆಗೆ ಹೋದರೆ ಅಧಿಕಾರಿಗಳು ಇರುವುದಿಲ್ಲ ಎಂದು ನಾಗರೀಕರಾದ ಜಗದೀಶ್ ಎಂಬವರು ಆರೋಪಿಸಿದಾಗ, ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ತಕ್ಷಣವೇ ಈ ಪದ್ಧತಿಯನ್ನು ಬದಲಾಯಿಸಿ, ಅಧಿಕಾರಿಗಳು ಚಲಾವನೆವನ್ನು ದಾಖಲಿಸಬೇಕು ಎಂದು ಇಲಾಖಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಇನ್ನು, ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಹಾಜರಾತಿ ತಂಬ್ ನೀಡಿ ಹೊರಟು ಹೋಗುತ್ತಾರೆ. ಆ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲು ತೆರಳುತ್ತಿದ್ದಾರೆ ಎಂದು ಸಾರ್ವಜನಿಕರು ಗಂಭೀರ ಆರೋಪವನ್ನು ಮಾಡಿದಾಗ, ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತೇನೆ. ಅಲ್ಲದೇ, ಡಿಹೆಚ್ಓ ಅವರ ಗಮನಕ್ಕೆ ತರಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ಸಭೆಯಲ್ಲಿ, ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಮುಖ್ಯಾಧಿಕಾರಿ ರಾಜೇಶ್ ಕೆ., ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮುಗಳಿ ನಾರಾಯಣ ರಾವ್ ಹಾಗೂ ಇಲಾಖಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಶಾಸಕ ಹರೀಶ್ ಪೂಂಜಾ ಭರವಸೆ :
ಜನಸ್ಪಂದನ ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಸ್ವಲ್ಪ ಸಮಯ ಬಿಟ್ಟು, ಖುದ್ದಾಗಿ ನಾನೇ ಪರಿಶೀಲನೆ ಮಾಡಲಿದ್ದೇನೆ. ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನೆ ನಡೆಸಲಿದ್ದೇವೆ. ಯಾವುದೇ ಕಾರಣಕ್ಕೂ ಸಮಸ್ಯೆಗಳನ್ನು ಸಭೆಯಲ್ಲೇ ಬಿಟ್ಟು ಬಿಡುವುದಿಲ್ಲ ಎಂದು ಸಾರ್ವಜನಿಕರೋರ್ವರ ಪ್ರಶ್ನೆಗೆ ಉತ್ತರಿಸುತ್ತಾ, ಭರವಸೆ ನೀಡಿದರು.


