ಬೆಂಗಳೂರು : ಬಿಹಾರದಲ್ಲಿ ಬಿಜೆಪಿ ಬೆಂಬಲಿತ ಎನ್ ಡಿಎ ಭರ್ಜರಿ ಗೆಲುವು ದಾಖಲಿಸಿದ್ದು, ಇದೀಗ ಕರ್ನಾಟಕದ ಬಿಜೆಪಿಯಲ್ಲಿಯೂ ಒಗ್ಗಟ್ಟಿನ ಜಪ ಪ್ರಾರಂಭವಾಗಿದೆ. ಇದರ ಮೊದಲ ಹೆಜ್ಜೆ ಎಂಬಂತೆ ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜತೆಗೆ ಹಿರಿಯ ನಾಯಕರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಬಿ.ಶ್ರೀರಾಮುಲು, ಗೋವಿಂದ ಕಾರಜೋಳ ಮೊದಲಾದವರು ಪಾಲ್ಗೊಂಡು, ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಕೋರ್ ಕಮಿಟಿ ಸಭೆ ಹೊರತುಪಡಿಸಿದರೆ ರಾಜ್ಯ ಸರ್ಕಾರದ ವಿರುದ್ಧ ನಡೆಸುವ ಹೋರಾಟಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಒಟ್ಟಾಗಿ ನಿರ್ಧಾರ ತೆಗೆದುಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ವಿರಳವಾಗಿತ್ತು. ಆದರೆ, ಶನಿವಾರ ನಡೆದ ಸಭೆಯಲ್ಲಿ ಹಿರಿಯರೆಲ್ಲರೂ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಅದರಲ್ಲೂ ಈ ಸಭೆಯ ಬಳಿಕ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷರಾಗಿ 2 ವರ್ಷ ಪೂರೈಸಿದ್ದಕ್ಕೆ ಬಸವರಾಜ ಬೊಮ್ಮಾಯಿ ಹಾಗೂ ಆರ್.ಅಶೋಕ್ ಅಭಿನಂದನೆ ಸಲ್ಲಿಸಿದ್ದು ಬಹಳ ವಿಶೇಷವಾಗಿತ್ತು.

