ಕಾರವಾರ, ಜು. 5 : ಸ್ಕೂಟಿಯೊಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಬೆಂಗಾವಲು ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ.
ಕಾರವಾರದಿಂದ ಉಡುಪಿ ಕಡೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ಬೆಂಗಾವಲು ವಾಹನಗಳೊಂದಿಗೆ ಕರೆದೊಯ್ಯುವ ವೇಳೆ ಅಂಕೋಲಾದ ವರದರಾಜ್ ಹೋಟೆಲ್ ಸಮೀಪ ಈ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಅಲಗೇರಿ ಮೂಲದ ಸಂದೀಪ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತವಾಗುತ್ತಿದ್ದಂತೆಯೇ ಸಚಿವ ಯು.ಟಿ.ಖಾದರ್ ಅವರು ಸ್ವತಃ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆನ್ನಲಾಗಿದೆ.
ಘಟನೆ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


