ಚಿಕ್ಕಮಗಳೂರು, ಜು. 24 : ತೀರಾ ಇತ್ತೀಚೆಗಷ್ಟೇ ಉಪ್ಪಿನಂಗಡಿ ಪ್ರದೇಶದಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಮಂಗಳೂರು ಮೂಲದ ವ್ಯಕ್ತಿಯೋರ್ವ ಸ್ಥಳೀಯ ವ್ಯಕ್ತಿಯ ಸಹಕಾರದೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ವೇಳೆ ಮೂಡಿಗೆರೆ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ₹200 ಮುಖಬೆಲೆಯ ಒಟ್ಟು ₹18,000 ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂಡಿಗೆರೆ ಪಟ್ಟಣದ ನೂತನ ಲೇಔಟ್ ಪ್ರದೇಶದಲ್ಲಿ ನಕಲಿ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರು ಮೂಲದ ಮಹಮದ್ ಅಲಿ ಹಾಗೂ ಮೂಡಿಗೆರೆಯ ಸ್ಥಳೀಯ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಇಬ್ಬರೂ ಆರೋಪಿಗಳ ಬಳಿ ತಲಾ 45 ರಂತೆ ಒಟ್ಟು 90 ನಕಲಿ ನೋಟುಗಳು (₹200 ಮುಖಬೆಲೆ) ಪತ್ತೆಯಾಗಿವೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಲ್ಲ, ‘ಬಿಸರ್ವ್ ಬ್ಯಾಂಕ್!’
ಆರೋಪಿಗಳು ಚಲಾವಣೆ ಮಾಡಲು ತಂದಿದ್ದ ನೋಟುಗಳ ಮೇಲೆ ‘ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ’ (Reserve Bank of India) ಎಂದು ಇರಬೇಕಾದ ಜಾಗದಲ್ಲಿ ‘ಬಿಸರ್ವ್ ಬ್ಯಾಂಕ್ ಆಫ್ ಇಂಡಿಯಾ’ (Beserve Bank of India) ಎಂದು ಮುದ್ರಿಸಲಾಗಿತ್ತು. ಮಂಗಳೂರಿನಿಂದ ಆಗಮಿಸಿದ್ದ ಮಹಮದ್ ಅಲಿ, ಮೂಡಿಗೆರೆಯಲ್ಲಿ ಈ ನಕಲಿ ನೋಟುಗಳನ್ನು ಮಾರಾಟ ಮಾಡಲು ಹಾಗೂ ಚಲಾವಣೆ ಮಾಡಲು ಯತ್ನಿಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಮೂಡಿಗೆರೆ ಪೊಲೀಸರು ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇನ್ನು ಯಾರಿದ್ದಾರೆ ಹಾಗೂ ನಕಲಿ ನೋಟುಗಳ ಮುದ್ರಣ ಎಲ್ಲಿ ನಡೆಯುತ್ತಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


