ಕಾಸರಗೋಡು : ಕೇರಳ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪಡಿತರ ಚೀಟಿಗಳಲ್ಲಿ (ರೇಷನ್ ಕಾರ್ಡ್) ಕನ್ನಡ ಭಾಷೆಯನ್ನು ಅಳವಡಿಸಲು ಕ್ರಮ ಕೈಗೊಳ್ಳುವಂತೆ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ. ಕೇರಳ ಸರ್ಕಾರದಿಂದ ಬಂದಿರುವ ಈ ಮಹತ್ವದ ಆದೇಶವು ಗಡಿಭಾಗದ ಕನ್ನಡಿಗರಿಗೆ ಸಿಹಿ ನೀಡಿದೆ.
ಇತ್ತೀಚೆಗೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಮತ್ತು ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯ ಕಟ್ಟೆ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಕಾಸರಗೋಡು ಪ್ರದೇಶದಲ್ಲಿ ವಾಸಿಸುವ ಸಾವಿರಾರು ಕನ್ನಡಿಗರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಮುಖ್ಯಮಂತ್ರಿಗೆ ವಿನಂತಿಸಿದ್ದರು.
ಕಾಸರಗೋಡಿನಲ್ಲಿ ಮುದ್ರಿಸಲ್ಪಡುವ ಗುರುತಿನ ಚೀಟಿಗಳು ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ಲಭ್ಯವಾಗುತ್ತಿತ್ತು. ಇದರಿಂದ ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರು ಹಲವು ಆಡಳಿತಾತ್ಮಕ ಅಡಚಣೆಗಳನ್ನು ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ, ರೇಷನ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳನ್ನು ಮುದ್ರಿಸುವಾಗ ಕನ್ನಡ ಭಾಷೆಯನ್ನೂ ಸೇರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗಿದೆ.

