ಮಂಗಳೂರು, ಜು. 20 : ಇಡೀ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಅಮಾಯಕ ಹೆಣ್ಣು ಮಗಳು ಲಾವಣ್ಯಳ ಬರ್ಬರ ಹತ್ಯೆ ಪ್ರಕರಣ ಆರೋಪಿ ಮೂರು ದಿನಗಳಾದರೂ ಇನ್ನೂ ಆಸ್ಪತೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಲಿಪಾಷಾಣ ಸೇವಿಸಿದ್ದ ಸೈಕೋ ಕಿಲ್ಲರ್ ನನ್ನು ಬಂಟ್ವಾಳ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಸದ್ಯ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯರ ಮಾಹಿತಿ ಪ್ರಕಾರ, ಚೇತನ್ ಆರೋಗ್ಯ ಸ್ಥಿತಿ ಸುಧಾರಿಸಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ ಎನ್ನಲಾಗಿದೆ. ಆದರೆ, ಇನ್ನೂ ಒಂದೆರಡು ದಿನಗಳ ಕಾಲ ಐಸಿಯುನಲ್ಲೇ ಚಿಕಿತ್ಸೆ ಬೇಕಾಗಿದೆ ಎನ್ನಲಾಗಿದೆ. ಕೊಲೆ ಪ್ರಕರಣದ ಆರೋಪಿ ಚೇತನ್ ನನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ, ಆಸ್ಪತ್ರೆಯ ಸುತ್ತ ಮತ್ತು ಐಸಿಯು ಭಾಗದಲ್ಲಿ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ.
ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರು ?
ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಹಾಡಹಗಲೇ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಇಲಿಪಾಷಾಣ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚೇತನ್ ನನ್ನು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ನ್ಯಾಯಾಲದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸೂಕ್ತ ಸಾಕ್ಷ್ಯಾಧರಗಳೂ ಇರುವುದರಿಂದ ಕಠಿಣ ಶಿಕ್ಷೆ ವಿಧಿಸುವ ಸಾಧ್ಯತೆಯೇ ಹೆಚ್ಚು ಆದರೆ, ನ್ಯಾಯಾಲಯವು ಯಾವ ರೀತಿಯ ಶಿಕ್ಷೆ ವಿಧಿಸುತ್ತದೋ ಎಂಬುದನ್ನು ಕಾದು ನೋಡಬೇಕಿದೆ.
ಖಾಕಿ ಪಡೆ ಅಲರ್ಟ್ !
ಅಮಾಯಕ ಹೆಣ್ಣು ಮಗಳನ್ನು ಕೊಂದ ಸೈಕೋ ಪ್ರೇಮಿಯ ಕೃತ್ಯದ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಲಾವಣ್ಯಳ ಮನೆಯವರೂ ಕೂಡಾ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ಎಂದು ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಅಲ್ಲದೆ, ಸಾರ್ವಜನಿಕರು ಕೂಡಾ ಗಲ್ಲು ಶಿಕ್ಷೆ ಅಥವಾ ಎನ್ ಕೌಂಟರ್ ಮಾಡಬೇಕೆಂದು ಆಗ್ರಹಿಸಿದ್ದರು. ಈ ಎಲ್ಲಾ ಬೆಳವಣಿಗೆಗಳಿಂದಾಗಿ ಆರೋಪಿ ಚೇತನ್ ಗಾಗಿ ಬಿಗಿ ಭದ್ರತೆಯನ್ನು ನೀಡಲಾಗಿದೆ. ಜಿಲ್ಲೆಯ ಖಾಕಿ ಪಡೆಯು ಯಾವುದೇ ಅಹಿತಕರ ಘಟನೆ ನಡೆಯದಂತೆ ಅಲರ್ಟ್ ಆಗಿದೆ. ಪ್ರಕರಣದ ಆಕ್ರೋಶವು ತಣ್ಣಗಾದ ಬಳಿಕವೇ ಆತನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿದೆ.


