ಮಂಗಳೂರು, ಡಿ. 03 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆಗಳು ಬಹುತೇಕ ಪರಿಹಾರಗೊಂಡಿದೆ. ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ಒಳಗೆ ಪರವಾನಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾಹಿತಿ ನೀಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಈಗಾಗಲೇ 19 ಬ್ಲಾಕ್ಗಳಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಇನ್ನೂ 42 ಮರಳು ಬ್ಲಾಕ್ಗಳನ್ನು ಗುರುತಿಸಲಾಗಿದೆ. ಇದರಿಂದಾಗಿ ಮುಂದಿನ ಐದು ವರ್ಷ ಮರಳುಗಾರಿಕೆಗೆ ಸಮಸ್ಯೆಯಾಗುವ ಸಾಧ್ಯತೆ ಇಲ್ಲ ಎಂದರು. ಜಿಲ್ಲೆಯಲ್ಲಿ ಈ ಹಿಂದೆ 30-35 ರೂ.ಗೆ ದೊರೆಯುತ್ತಿದ್ದ ಕೆಂಪುಕಲ್ಲು ಬಳಿಕ 65 ರೂ.ಗೆ ಏರಿಕೆಯಾಗಿತ್ತು. ಈ ಸಮಸ್ಯೆ ಬಗೆಹರಿಸಿ, ಕೆಂಪು ಕಲ್ಲು ತೆಗೆಯಲು ಇದುವರೆಗೆ 59 ಪರ್ಮಿಟ್ಗಳನ್ನು ನೀಡಲಾಗಿದೆ. ಇನ್ನೂ 12 ಅರ್ಜಿಗಳು ಬಾಕಿ ಉಳಿದಿದ್ದು, ಶೀಘ್ರ ವಿಲೇವಾರಿ ಮಾಡಲಾಗುವುದು ಎಂದರು. ಸದ್ಯ ಕಲ್ಲಿನ ದರ 45 ರೂ.ಗೆ ಇಳಿಕೆಯಾಗಿದೆ. ಮುಂದೆ ಇದನ್ನು 40 ರೂ.ಗಿಂತ ಕೆಳಗೆ ಇಳಿಸುವ ಉದ್ದೇಶ ಇದೆ. ಕೆಂಪುಕಲ್ಲು ತೆಗೆಯಲು ಅರ್ಜಿ ಆಹ್ವಾನಿಸಲಾಗಿದ್ದು, 60 ಅರ್ಜಿಗಳು ಮಾತ್ರ ಬಂದಿದೆ. ಆಸಕ್ತರು ಅರ್ಜಿ ಹಾಕಿದರೆ ಪರ್ಮಿಟ್ ನೀಡಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ದ.ಕ. ಜಿಪಂ ಸಿಇಒ ನರ್ವಾಡೆ ವಿನಾಯಕ ಕರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ. ಉಪಸ್ಥಿತರಿದ್ದರು.
ರಸ್ತೆ ಗುಂಡಿ ಮುಚ್ಚಲು ಕ್ರಮ: ಜಿಲ್ಲೆಯ ರಸ್ತೆ ಗುಂಡಿಗಳನ್ನು ಮುಚ್ಚಲು ಈಗಾಗಲೇ ರಸ್ತೆಗಳನ್ನು ಗುರುತಿಸಲಾಗಿದೆ. ಮೊದಲ ಹಂತದಲ್ಲಿ ಏಳು ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

