ಭಟ್ಕಳ, ಜೂ. 02 : ತಾಲೂಕೇ ದುಃಖದಲ್ಲಿದ್ದ ಮೇ 24ರಂದು, ಹಿರಿಯರ ಮಾರ್ಗದರ್ಶನದಲ್ಲಿ ಮತಾಂಧ ಮುಸ್ಲಿಂ ದುಷ್ಕರ್ಮಿಗಳು ಸಾವಿರಾರು ಸಂಖ್ಯೆಯಲ್ಲಿ ಬಂದು ಮುರಿನಕಟ್ಟೆಯನ್ನು ಧ್ವಂಸಗೊಳಿಸಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಭಟ್ಕಳಕ್ಕೆ ಭೇಟಿ ನೀಡಿ, ಧ್ವಂಸಗೊಂಡ ಮುರಿನಕಟ್ಟೆ ಜಾಗವನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರಿನಕಟ್ಟೆ ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಅಂತಿಮವಾಗಿ ನಮ್ಮ ಧಾರ್ಮಿಕ ಆಚರಣೆಗೆ ಯಾವುದೇ ಧಕ್ಕೆ ಬಾರದಂತೆ, ಹಿಂದೆ ಇದ್ದ ಸ್ಥಳದಲ್ಲಿಯೇ ಮುರಿನಕಟ್ಟೆಯನ್ನು ಮರುಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
“ಮುರಿನಕಟ್ಟೆ ವಿವಾದ ಕೇವಲ ಭಟ್ಕಳಕ್ಕೆ ಸೀಮಿತವಾಗಿರದೆ ಇಡೀ ರಾಜ್ಯದ ಗಮನ ಸೆಳೆದಿದೆ. ನೂತನ ಕಟ್ಟೆಯನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಬಿಜೆಪಿ ವತಿಯಿಂದ ಈಗಾಗಲೇ ಸಹಸ್ರಾರು ಜನರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಈ ಅನ್ಯಾಯದ ವಿರುದ್ಧ ಯಾವುದೇ ಸಂಘಟನೆಗಳು ಪ್ರತಿಭಟನೆ ನಡೆಸಿದರೂ ನಮ್ಮ ಸಂಪೂರ್ಣ ಬೆಂಬಲ ಇರಲಿದೆ” ಎಂದು ಅವರು ಹೇಳಿದರು.
ಹೊಸ ನೀಲನಕ್ಷೆ ಸಿದ್ದ
ಹೆದ್ದಾರಿ ಇಲಾಖೆಯೊಂದಿಗೆ ಚರ್ಚಿಸಿದಂತೆ ಈಗಾಗಲೇ ಹೊಸ ನೀಲನಕ್ಷೆ (Blue Print) ಸಿದ್ಧಪಡಿಸಲಾಗಿದೆ. ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಜಾಗ ಗುರುತಿಸಿ, ಆದಷ್ಟು ಶೀಘ್ರದಲ್ಲಿ ಕಟ್ಟಿ ನಿರ್ಮಾಣ ಮಾಡಲಾಗುವುದು. ಸುರಕ್ಷತೆಯ ದೃಷ್ಟಿಯಿಂದ ಲೈಟಿಂಗ್, ಗ್ರಿಲ್ಸ್ ಅಳವಡಿಸುವುದರ ಜೊತೆಗೆ ಅದರ ಪಕ್ಕದಲ್ಲೇ ಬಸ್ ಬೇ (Bus Bay) ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಅತಿಕ್ರಮಣಕ್ಕೆ ಅವಕಾಶವಿಲ್ಲ
ಯಾವುದೇ ಕಾರಣಕ್ಕೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ವಶಪಡಿಸಿಕೊಂಡ ಜಾಗವನ್ನು ಅತಿಕ್ರಮಣ ಮಾಡಲು ಬಿಡುವುದಿಲ್ಲ. ಕಾನೂನಾತ್ಮಕವಾಗಿ ಎಲ್ಲಾ ಪ್ರಕ್ರಿಯೆಗಳನ್ನು ತ್ವರಿತಗತಿಯಲ್ಲಿ ಮುಗಿಸಲಾಗುವುದು” ಎಂದರು. ತಮಗೆ ಯಾವುದೇ ಸಂಬಂಧವಿಲ್ಲದಿದ್ದರೂ ಭಟ್ಕಳದಲ್ಲಿ ಮುಸ್ಲಿಂ ಯುವಕರು ಹಿರಿಯರ ಮಾರ್ಗದರ್ಶನದಲ್ಲಿ ಶಾಂತಿ ಕದಡುವ ಯತ್ನ ಮಾಡಿರುವುದನ್ನು ಎಂದಿಗೂ ಸಹಿಸುವುದಿಲ್ಲ. ಇಂತಹವರ ಆಟ ಭಟ್ಕಳದಲ್ಲಿ ನಡೆಯುವುದಿಲ್ಲ ಎಂದು ಕಾಗೇರಿ ಇದೇ ವೇಳೆ ಖಡಕ್ ಟಾಂಗ್ ನೀಡಿದರು.


