ಬೆಳ್ತಂಗಡಿ, ಆ. 03 : ತಾಲೂಕಿನಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ ಗುಂಡಿಗಳು ಪ್ರತ್ಯಕ್ಷವಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಈ ಹಿನ್ನಲೆಯಲ್ಲಿ ತುರ್ತು ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಶೀಘ್ರವೇ ಹೆದ್ದಾರಿಯ ಗುಂಡಿಗಳಿಗೆ ಮುಕ್ತಿ ನೀಡುವಂತೆ ಸೂಚನೆ ನೀಡಿದ್ದರು. ಇದೀಗ ಬೆಳ್ತಂಗಡಿ ಪೇಟೆ ಭಾಗದಲ್ಲಿ ಗುಂಡಿಗಳಿಗೆ ವೆಟ್ ಮಿಕ್ಸ್ ಜೊತೆಗೆ ಜಲ್ಲಿಕಲ್ಲು ಹಾಕಿ ಗುಂಡಿಗಳನ್ನು ಮುಚ್ಚಲಾಗುತ್ತಿದೆ.

ಇಂದು ಬೆಳಗ್ಗೆ ಶಾಸಕ ಹರೀಶ್ ಪೂಂಜಾರವರ ಅಧ್ಯಕ್ಷತೆಯಲ್ಲಿ ತುರ್ತು ಸಭೆಯು ತಾಲೂಕು ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ಅಧಿಕಾರಿಗಳಿಗೆ ಶಾಸಕರು ನೀಡಿದ್ದರು.

ಅಲ್ಲದೆ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಹೆದ್ದಾರಿಗಳ ಬೃಹತ್ ಗುಂಡಿಗಳಿಗೆ ಶೀಘ್ರವೇ ಮುಕ್ತಿ ನೀಡುವಂತೆ ಸೂಚನೆಯನ್ನೂ ನೀಡಿದ್ದರು. ಇದೀಗ ತಾತ್ಕಾಲಿಕವಾಗಿ ಗುಂಡಿಗಳಿಗೆ ಮುಕ್ತಿ ದೊರಕಿದಂತಾಗಿದೆ. ಇದೇ ರೀತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮೀಣ ಭಾಗದ ರಸ್ತೆಗಳಿಗೂ ಕಾಯಕಲ್ಪ ನೀಡಲಿ ಎಂಬುದು ನಮ್ಮ ಆಶಯ.




