ಹೈದರಾಬಾದ್, ಜೂ. 17 : ಪಾನಿಪುರಿ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವ ಘಟನೆ ತೆಲಂಗಾಣದ ರಾಜನ್ನ ಸಿರಿಸಿಲ್ಲ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮಾಹಿತಿ ಪ್ರಕಾರ, ಸೋಮವಾರ (ಜೂ.15) ಸಂಜೆ ಈ ಮಕ್ಕಳು ಸ್ಥಳೀಯ ವ್ಯಾಪಾರಿಯೊಬ್ಬನ ಬಳಿ ಪಾನಿಪುರಿ ತಿಂದಿದ್ದರು ಎನ್ನಲಾಗಿದೆ. ಮರುದಿನ ಅಂದರೆ ಮಂಗಳವಾರ ಮುಂಜಾನೆ ವೇಳೆಗೆ ಮಕ್ಕಳಲ್ಲಿ ತೀವ್ರ ಹೊಟ್ಟೆನೋವು, ವಾಂತಿ ಹಾಗೂ ಭೇದಿ ಲಕ್ಷಣಗಳು ಕಾಣಿಸಿಕೊಂಡಿವೆ. ಆರಂಭದಲ್ಲಿ ಕೆಲವು ಮಕ್ಕಳಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಸಮಸ್ಯೆ ನಂತರದ ಗಂಟೆಗಳಲ್ಲಿ ಅಸ್ವಸ್ಥರಾದ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಾ ಹೋಗಿದೆ.
ಇದರಿಂದ ಆತಂಕಗೊಂಡ ಪೋಷಕರು ಮಕ್ಕಳನ್ನು ತಕ್ಷಣವೇ ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಮಂಗಳವಾರ ಸಂಜೆ ವೇಳೆಗೆ 20ಕ್ಕೂ ಹೆಚ್ಚು ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವರದಿಯಾಗಿದೆ. ಪೋಷಕರ ಪ್ರಕಾರ, ಮಕ್ಕಳು ಹಿಂದಿನ ದಿನ ಸೇವಿಸಿದ್ದ ಪಾನಿಪುರಿಯೇ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದು ಆದರೆ, ಅಸ್ವಸ್ಥತೆಗೆ ನಿಖರ ಕಾರಣವೇನು ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
ವೈದ್ಯಕೀಯ ಅಧಿಕಾರಿಗಳು ಮಕ್ಕಳ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಕಲುಷಿತ ಆಹಾರ ಸೇವನೆಯಿಂದ ಈ ಘಟನೆ ಸಂಭವಿಸಿದ್ದೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ.


