ಬೆಳ್ತಂಗಡಿ, ಫೆ. 09 : ಮುಸುಕುಧಾರಿಗಳಿಂದ ಅಪಹರಣ ಯತ್ನಕ್ಕೊಳಗಾದ ಗಾಯಾಳು ವಿದ್ಯಾರ್ಥಿನಿಯನ್ನು ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಯಲ್ಲಿ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, “ಈ ಒಂದು ಘಟನೆ ಚಿಕ್ಕ ಘಟನೆಯಲ್ಲ, ಇಡೀ ರಾಜ್ಯವೇ ಆತಂಕಪಡುವಂತಹ ಘಟನೆಯಾಗಿದೆ. ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿರುವ ಈ ಘಟನೆಯಿಂದಾಗಿ ಸಮಾಜದಲ್ಲಿ ಓಡಾಡಲೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆರೋಪಿಗಳನ್ನು ತಕ್ಷಣವೇ ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತೇವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೂ ಮಾತನಾಡಿದ್ದೇನೆ. ಬೆಳ್ತಂಗಡಿ ಪೊಲೀಸರು ಈಗಾಗಲೇ ಸಿಸಿ ಕ್ಯಾಮರಾ ಪರಿಶೀಲನೆಗಳನ್ನು ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕಾನೂನು ಉಲ್ಲಂಘನೆ, ಅಶಾಂತಿ ನಿರ್ಮಾಣದ ಕೃತ್ಯಗಳು ಪದೇ ಪದೇ ನಡೆಯುತ್ತಲೇ ಇದೆ. ಇದಕ್ಕೆ ಮೂಲ ಕಾರಣವೇ ಗೃಹ ಇಲಾಖೆಯ ವೈಫಲ್ಯವಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತವಾದ ಕ್ರಮವನ್ನು ಕೈಗೊಳ್ಳಬೇಕು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಶೆಟ್ಟಿ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

