ಧರ್ಮಸ್ಥಳ : ದಕ್ಷಿಣ ಭಾರತದಲ್ಲಿ ಮೊದಲ ಸ್ಪರ್ ರಸ್ತೆಯಾಗಿ ಘೋಷಣೆಯಾಗಿದ್ದು ಅದು ಉಜಿರೆ-ಪೆರಿಯಶಾಂತಿ ರಸ್ತೆಯಾಗಿದೆ. ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿ ಕಾಣುತ್ತಿದ್ದರೆ ಅದು ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ, ನಿತಿನ್ ಗಡ್ಕರಿಯವರು ಸಚಿವರಾದ ಬಳಿಕ ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ 614 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಯ ಶಿಲನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಜಿರೆಯಿಂದ ಪೆರಿಯಶಾಂತಿಗೆ ಕೇವಲ ಅರ್ಧ ಗಂಟೆಯಲ್ಲಿ ಸಂಚರಿಸುವ ರೀತಿಯಲ್ಲಿ, ಜನರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣವಾಗುವ ವಿಶ್ವಾಸವಿದೆ ಎಂದರು.
ಇಡೀ ರಾಜ್ಯದಲ್ಲಿ ಒಂದು ವಿಧಾನಸಭಾ ಕ್ಷೇತ್ರದಲ್ಲಿ ರಾ.ಹೆದ್ದಾರಿಗಳು ಮೂರು ಟೆಂಡರ್ ಪ್ರಕ್ರಿಯೆಗಳು ಪೂರ್ಣಗೊಂಡಿರುವುದು ಅದು ನಮ್ಮ ಬೆಳ್ತಂಗಡಿ ತಾಲೂಕಿನಲ್ಲಿ ಎಂಬುದು ನಮ್ಮ ಹೆಮ್ಮೆ. ಆದರೆ, ಇಂದಿನ ರಾಜ್ಯ ಸರ್ಕಾರದ ಅವಧಿಯಲ್ಲಿ ರಸ್ತೆ ನಿರ್ಮಾಣ ಮಾಡಲಾಗದ ದುಸ್ಥಿತಿಯಲ್ಲಿ ನಾವಿದ್ದೇವೆ. ಹೀಗಾಗಿ ನಮ್ಮ ಸಂಸದರಾದ ಕ್ಯಾ. ಬೃಜೇಶ್ ಚೌಟರವರು ಕೇಂದ್ರ ಸರ್ಕಾರದ ಯೋಜನೆಗಳ ಮೂಲಕ ನಮ್ಮ ತಾಲೂಕಿನ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡಬೇಕಾಗಿದೆ ಎಂದು ಸಂಸದರಲ್ಲಿ ಮನವಿ ಮಾಡಿಕೊಂಡರು.

