ಬೆಂಗಳೂರು, ಆ. 06 : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ, ಬಳಿಕ ಮದುವೆಗೆ ನಿರಾಕರಿಸಿ ಮಗು ಜನಿಸಿದ ನಂತರ ವಂಚನೆ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪುತ್ತೂರಿನ ಕೃಷ್ಣಾ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.
ಹೈಕೋರ್ಟ್ನ ನಿರ್ದೇಶನದಂತೆ ನಡೆದ ಮಧ್ಯಸ್ಥಿಕೆ (ಮೆಡಿಯೇಷನ್) ಪ್ರಕ್ರಿಯೆಯಲ್ಲಿ ಆರೋಪಿ ಸಂತ್ರಸ್ತೆಯನ್ನು ವಿವಾಹವಾಗಲು ಒಪ್ಪದ ಹಿನ್ನೆಲೆಯಲ್ಲಿ ರಾಜಿ ಸಂಧಾನದ ಪ್ರಯತ್ನ ವಿಫಲವಾಗಿದೆ ಎಂದು ಮೂಲಗಳು ತಿಳಿಸಿವೆ.
ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಕೃಷ್ಣಾ ಜೆ. ರಾವ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ ಹೈಕೋರ್ಟ್ನಲ್ಲಿ ನಡೆಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಸೆಪ್ಟೆಂಬರ್ 11ರಂದು ಸಂಜೆ 4.30ಕ್ಕೆ ಮುಂದೂಡಿದೆ.
ಪ್ರಕರಣದ ಮುಂದಿನ ವಿಚಾರಣೆಯವರೆಗೆ ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಹಾಗೂ ಸಂತ್ರಸ್ತೆ ಮತ್ತು ಮಗುವಿನ ಪಾಲನೆಗಾಗಿ ಪ್ರತಿ ತಿಂಗಳು ₹75 ಸಾವಿರ ನೀಡುವಂತೆ ನೀಡಿದ್ದ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ. ಸಂತ್ರಸ್ತೆ 2025ರ ಜೂನ್ನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಗಳನ್ನು ರದ್ದುಪಡಿಸುವಂತೆ ಕೋರಿ ಆರೋಪಿ ತಮ್ಮ ಪರ ವಕೀಲ ಪಿ.ಪಿ. ಹೆಗ್ಡೆ ಅವರ ಮೂಲಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಮಾಸಿಕ ₹75 ಸಾವಿರ ಪರಿಹಾರ ನೀಡುವ ಷರತ್ತಿನೊಂದಿಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದರ ನಡುವೆ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅವಕಾಶ ನೀಡುವಂತೆ ಆರೋಪಿ ಪರ ವಕೀಲರು ಮನವಿ ಸಲ್ಲಿಸಿದ್ದು, ನ್ಯಾಯಾಲಯವು ಅದಕ್ಕೆ ಅನುಮತಿ ನೀಡಿತ್ತು.ಹೈಕೋರ್ಟ್ ನೇಮಕಗೊಳಿಸಿದ್ದ ಮಧ್ಯಸ್ಥಿಕೆದಾರರಾದ ಪದಾಂಕಿತ ಹಿರಿಯ ವಕೀಲೆ ಎಸ್. ಸುಶೀಲ ಅವರು ಮಧ್ಯಸ್ಥಿಕೆ ಕೇಂದ್ರದಲ್ಲಿ ಸಂತ್ರಸ್ತೆ ಹಾಗೂ ಆರೋಪಿ ಪರದವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಸಂತ್ರಸ್ತೆಯನ್ನು ವಿವಾಹವಾಗಲು ಆರೋಪಿ ಒಪ್ಪದ ಹಿನ್ನೆಲೆಯಲ್ಲಿ ಸಂಧಾನ ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಮಧ್ಯಸ್ಥಿಕೆ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ ಎನ್ನಲಾಗಿದೆ.


