ಹೊಸದಿಲ್ಲಿ : ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಏಕದಿನ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದ್ದು, ಕನ್ನಡಿಗ ಕೆಎಲ್ ರಾಹುಲ್ಗೆ ನಾಯಕತ್ವ ವಹಿಸಲಾಗಿದೆ. ಭಾನುವಾರ ಸಂಜೆ ಬಿಸಿಸಿಐ ಆಯ್ಕೆ ಸಮಿತಿ 15 ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್) ಮತ್ತು ರಿಷಭ್ ಪಂತ್ (ವಿಕೆಟ್ ಕೀಪರ್) ಅವರಂತಹ ಪ್ರಮುಖ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ ಕೃಷ್ಣ, ಹರ್ಷದೀಪ್ ಸಿಂಗ್, ಧ್ರುವ್ ಜುರೆಲ್ ಏಕದಿನ ಸರಣಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂರು ಪಂದ್ಯಗಳ ಸರಣಿಯು ನವೆಂಬರ್ 30 ರಿಂದ ಡಿಸೆಂಬರ್ 6 ರವರೆಗೆ ರಾಂಚಿ, ರಾಯ್ಪುರ ಮತ್ತು ವಿಶಾಖಪಟ್ಟಣಂನಲ್ಲಿ ನಡೆಯಲಿದೆ.
ಇನ್ನು, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆಗೆ ಗಾಯ ಮಾಡಿಕೊಂಡು ಗುವಾಹಟಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಶುಭಮನ್ ಗಿಲ್ ಅವರನ್ನು ಏಕದಿನ ಸರಣಿಗೂ ಆಯ್ಕೆ ಮಾಡಲಾಗಿಲ್ಲ.
ಸ್ಪಿನ್ನರ್ ಅಕ್ಷರ್ ಪಟೇಲ್ , ವೇಗಿಗಳಾದ ಜಸ್ ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಆದರೆ ದಕ್ಷಿಣ ಆಫ್ರಿಕಾ ‘ಎ’ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ ಋುತುರಾಜ್ ಗಾಯಕ್ವಾಡ್ ಗೆ ಮಣೆ ಹಾಕಲಾಗಿದೆ.

