ಭಾರತೀಯ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ನವದೆಹಲಿ, ಮಾ. 13 : ಟೀಂ ಇಂಡಿಯಾದ ಮಾಜಿ ನಾಯಕ, ತರಬೇತುದಾರ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಭಾರತೀಯ ಕ್ರಿಕೆಟ್‌ನ ಅತ್ಯುನ್ನತ ಗೌರವಗಳಲ್ಲಿ ಒಂದಾದ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಕ್ರಿಕೆಟ್ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಸೇವೆಗಾಗಿ ಈ ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡಲಾಗುತ್ತಿದೆ.

Advertisement

ಮಾರ್ಚ್ 15ರಂದು ನವದೆಹಲಿಯಲ್ಲಿ ನಡೆಯಲಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ವಾರ್ಷಿಕ ನಮನ್ ಪ್ರಶಸ್ತಿ ಸಮಾರಂಭದಲ್ಲಿ ದ್ರಾವಿಡ್ ಅವರಿಗೆ ಈ ಗೌರವ ನೀಡಿ ಸನ್ಮಾನಿಸಲಾಗುತ್ತದೆ. ಟೀಂ ಇಂಡಿಯಾದ ಬ್ಯಾಟಿಂಗ್ ಶಕ್ತಿಗೆ ಬೆನ್ನೆಲುಬಾಗಿದ್ದ ದ್ರಾವಿಡ್, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಅವರೊಂದಿಗೆ ಭಾರತದ ಬಲಿಷ್ಠ ಬ್ಯಾಟಿಂಗ್ ಬಳಗದ ಪ್ರಮುಖ ಅಂಗವಾಗಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಅಪಾರ ಸ್ಥಿರತೆ ತೋರಿದ ಕಾರಣ ಅವರಿಗೆ “ದಿ ವಾಲ್” ಎಂಬ ಪ್ರೀತಿಯ ಅಡ್ಡಹೆಸರು ಕೂಡ ದೊರೆತಿತ್ತು.

ಏಕದಿನ ಕ್ರಿಕೆಟ್‌ನಲ್ಲಿ 10 ಸಾವಿರಕ್ಕಿಂತ ಹೆಚ್ಚು ರನ್ ಗಳಿಸಿರುವ ದ್ರಾವಿಡ್, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಪರ 13,288 ರನ್ ಗಳಿಸಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ. 2012ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ದ್ರಾವಿಡ್ ತರಬೇತುದಾರರಾಗಿ ಹೊಸ ಇನ್ನಿಂಗ್ಸ್ ಆರಂಭಿಸಿದರು. ಅವರ ಮಾರ್ಗದರ್ಶನದಲ್ಲಿ ಭಾರತ 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಗಳಿಸಿತ್ತು. ನಂತರ ಹಿರಿಯ ತಂಡದ ಮುಖ್ಯ ತರಬೇತುದಾರರಾಗಿಯೂ ಸೇವೆ ಸಲ್ಲಿಸಿದ ಅವರು ತಂಡವನ್ನು 2023ರ ಏಕದಿನ ವಿಶ್ವಕಪ್ ಅಂತಿಮ ಪಂದ್ಯಕ್ಕೆ ಮುನ್ನಡೆಸಿದರು. ಅಲ್ಲದೆ 2024ರ ಟಿ20 ವಿಶ್ವಕಪ್‌ನಲ್ಲಿ ಭಾರತವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಆಟಗಾರ, ನಾಯಕ ಹಾಗೂ ತರಬೇತುದಾರರಾಗಿ ಭಾರತೀಯ ಕ್ರಿಕೆಟ್‌ಗೆ ಅಪಾರ ಕೊಡುಗೆ ನೀಡಿರುವ ರಾಹುಲ್ ದ್ರಾವಿಡ್ ಅವರಿಗೆ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿರುವುದು ಕ್ರಿಕೆಟ್ ಲೋಕದಲ್ಲಿ ಸಂತಸದ ವಿಚಾರವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.