ಬೆಳ್ತಂಗಡಿ, ಆ. 28 : ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು, ಗರ್ಭಿಣಿಯಾಗಿಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಧರ್ಮಸ್ಥಳ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯೊಂದಿಗೆ ಕಳೆದ ವರ್ಷ ಸೆಪ್ಟೆಂಬರ್ನಿಂದ ನವೆಂಬರ್ ಅವಧಿಯಲ್ಲಿ ಆರೋಪಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಶ್ರೀಕಾಂತ್ (21) ಎಂಬಾತ ಬಲವಂತವಾಗಿ ಅತ್ಯಾಚಾರ ನಡೆಸಿ, ಯಾರಿಗೂ ಹೇಳದಂತೆ ಬೆದರಿಕೆ ಒಡ್ಡಿದ್ದ ಎಂದು ಆರೋಪಿಸಲಾಗಿದೆ. ಭಯದಿಂದ ಬಾಲಕಿ ಯಾರಿಗೂ ತಿಳಿಸದೆ ಸುಮ್ಮನಿದ್ದಳು. ಬಳಿಕ ಗರ್ಭಿಣಿಯಾದ ಬಾಲಕಿ ಆ. 22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆ. 23ರಂದು ಧರ್ಮಸ್ಥಳ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಕೂಡಲೇ ಆರೋಪಿ ಪರಾರಿಯಾಗಲು ಯತ್ನಿಸಿದ್ದ.
ಬೆಂಗಳೂರಿನ ದೊಡ್ಡಬಳ್ಳಾಪುರದಿಂದ ತನ್ನ ಸ್ವಗ್ರಾಮವಾದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ, ಆ. 25ರಂದು ಸಂಜೆ ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಈತ ಆಂಧ್ರಪ್ರದೇಶ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಧರ್ಮಸ್ಥಳದ ಯುವತಿಯನ್ನು ಪರಿಚಯ ಮಾಡಿಕೊಂಡು ಸಂಬಂಧ ಬೆಳೆಸಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದೆ.
ಬಂಧಿತ ಆರೋಪಿಯನ್ನು ಆ. 26ರಂದು ಮಂಗಳೂರಿನ ಪೋಕೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಧರ್ಮಸ್ಥಳ ಠಾಣೆಯ ಎಸ್ಐ ಸಮರ್ಥ್ ಆರ್. ಗಾಣಿಗೇರ ತಂಡದ ಸಿಬ್ಬಂದಿಗಳಾದ ವೃಷಭ, ಮಹೇಶ್ ಮತ್ತು ಚರಣ್ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.




