ಬೆಂಗಳೂರು, ಫೆ. 13 : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಂದ್ಯಗಳನ್ನು ನಡೆಸುವ ಸಂಬಂಧ ಕ್ರೀಡಾಂಗಣದಲ್ಲಿ ಯಾವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂಬುದರ ಕುರಿತು ಶರತ್ತುಗಳನ್ನು ವಿಧಿಸುವ ವಿಶೇಷ ಆದೇಶವನ್ನು ಹೊರಡಿಸಲು ಗೃಹ ಇಲಾಖೆಗೆ ಜವಾಬ್ದಾರಿ ವಹಿಸಲಾಗಿದೆ. ನ್ಯಾಮೈಕಲ್ ಡಿ.ಕುನ್ಹಾ ಹಾಗೂ ಮಹೇಶ್ವರರಾವ್ ನೇತೃತ್ವದ ತಜ್ಞರ ಸಮಿತಿಯ ಶಿಫಾರಸ್ಸುಗಳನ್ನು ಗಮನದಲ್ಲಿರಿಸಿಕೊಂಡು ಗೃಹ ಇಲಾಖೆ ಆದೇಶ ಹೊರಡಿಸಲಿದೆ ಎಂದು ತಿಳಿಸಿದರು.
ಬೆಂಗಳೂರು ಟರ್ಫ್ ಕ್ಲಬ್ ಅನ್ನು ತುಮಕೂರು ಜಿಲ್ಲೆಯ ಕುಣಿಗಲ್ ಸ್ಟಡ್ ಫಾರಂಗೆ ಸ್ಥಳಾಂತರ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸುಪರ್ದಿಯಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ಸ್ಟಡ್ ಫಾರಂನಲ್ಲಿ ಒಟ್ಟು 110 ಎಕರೆ 24 ಗುಂಟೆ ಜಮೀನನ್ನು(ಬ್ಲಾಕ್ ಎ 101 ಎಕರೆ 24 ಗುಂಟೆ, ಬ್ಲಾಕ್ -ಬಿ 8 ಎಕರೆ 36 ಗುಂಟೆ ಒಳಗೊಂಡಂತೆ) ಬೆಂಗಳೂರು ಟರ್ಫ್ ಕ್ಲಬ್ಗೆ 29 ವರ್ಷ ಗುತ್ತಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
2010ರ ಜ.1 ರಿಂದ ಬೆಂಗಳೂರು ಟರ್ಫ್ ಕ್ಲಬ್ ಬಾಡಿಗೆ ಪರಿಷ್ಕರಣೆ ಆಗಿರಲಿಲ್ಲ. ಇದರಿಂದ ಸರಕಾರಕ್ಕೆ ತೀವ್ರ ಆರ್ಥಿಕ ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಟರ್ಫ್ ಕ್ಲಬ್ನ ವಾರ್ಷಿಕ ಆದಾಯದ ಶೇ.2ರಷ್ಟು ಮೊತ್ತವನ್ನು ಲೋಕೋಪಯೋಗಿ ಇಲಾಖೆಗೆ ಪಾವತಿಸುವಂತೆ ಸೂಚಿಸಲಾಗಿದೆ. ಅಲ್ಲದೇ, ಬೆಂಗಳೂರು ಟರ್ಫ್ ಕ್ಲಬ್ನ ಜಾಗವನ್ನು ಉಳಿಸಿಕೊಳ್ಳಲು ಸರಕಾರ ನಿರ್ಧರಿಸಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

