ಕಲ್ಮಂಜ, ಜೂ. 11 : ಮುಂಡಾಜೆಯಿಂದ ಧರ್ಮಸ್ಥಳ ಸಂಪರ್ಕಿಸುವ ರಸ್ತೆಯಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ, ಬ್ಯಾನರ್ ಅಳವಡಿಸಲಾಗಿದೆ.
ಮುಂಡಾಜೆಯಿಂದ ಧರ್ಮಸ್ಥಳ ಸಂಪರ್ಕಿಸುವ ರಸ್ತೆಯ ಪಿಲತ್ತಡ್ಕ ಹಾಗೂ ಒಂಜರೆಬೈಲು ಎಂಬಲ್ಲಿ ಸೇತುವೆಗಳು ನಿರ್ಮಾಣ ಹಂತದಲ್ಲಿದ್ದು, ಭಾಗಶ: ಕಾಮಗಾರಿ ಪೂರ್ಣಗೊಂಡಿದೆ. ಸದ್ಯ ತಾತ್ಕಾಲಿಕ ರಸ್ತೆಯ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾರ್ಮಾಡಿಯಿಂದ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತಾದಿಗಳ ಬಸ್ ಗಳು ಸೇರಿದಂತೆ ಬಹುತೇಕ ವಾಹನಗಳು ಈ ರಸ್ತೆಯಲ್ಲಿ ಸಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಇನ್ನು, ಕೊತ್ತಳಿಗೆ ಎಂಬಲ್ಲಿ ನೂತನ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಇಲ್ಲಿ ನೂತನ ಸೇತುವೆಯ ಮೂಲಕವೇ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಒಂಜರೆಬೈಲು ಹಾಗೂ ಪಿಲತ್ತಡ್ಕದ ನೂತನ ಸೇತುವೆ ಕಾಮಗಾರಿಯೂ ಆದಷ್ಟು ಶೀಘ್ರವಾಗಿ ಪೂರ್ಣಗೊಳ್ಳಲಿ ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.


