ಉಡುಪಿ, ಜು. 10 : ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಣಿಪಾಲ ಸಮೀಪದ ಕೊಡಂಗೆ ಪ್ರದೇಶದಲ್ಲಿ ಇಂದು ಬೆಳಗ್ಗೆ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡು, ಇತರ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಮಣಿಪಾಲ್ನ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿರುವ ಓರ್ವ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಅಪಘಾತ ಸಂಭವಿಸಿದ ಸಮಯದಲ್ಲಿ ರಸ್ತೆಯ ಮತ್ತೊಂದು ಬದಿಯಲ್ಲಿ ನಿಂತಿದ್ದ ಕೆಲವು ಮಕ್ಕಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಳಿಕ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಾಳು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಘಟನೆ ಸಂಬಂಧ ಮಣಿಪಾಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.


