ಬೆಂಗಳೂರು, ಏ. 26 : ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನಪತ್ರಿಕೆಗಳನ್ನು ಓದುವುದನ್ನು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಈ ಕ್ರಮವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸಿನ ಮೇರೆಗೆ ಜಾರಿಗೆ ತರಲಾಗಿದೆ.
ಶಾಲೆಗಳಲ್ಲಿ ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಪತ್ರಿಕೆ ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಇಲಾಖೆಯು ಸೂಚಿಸಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚಿನ ಅವಲಂಬನೆ ಹೊಂದಿರುವುದು ಗಮನಾರ್ಹವಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಹಾಗೂ ಡಿಜಿಟಲ್ ಚಟದಿಂದ ದೂರವಿಡಲು ಈ ಕ್ರಮ ಕೈಗೊಳ್ಳಲಾಗಿದೆ.
ಅತಿಯಾದ ಮೊಬೈಲ್ ಬಳಕೆಯಿಂದ ಉಂಟಾಗುವ ದೃಷ್ಟಿದೋಷ, ಸ್ಮರಣಶಕ್ತಿ ಕುಂಠಿತ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದು ಕೂಡ ಈ ಯೋಜನೆಯ ಪ್ರಮುಖ ಗುರಿಯಾಗಿದೆ. ಜೊತೆಗೆ, ದಿನಪತ್ರಿಕೆ ಓದುವುದರಿಂದ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಹೆಚ್ಚುವ ಜೊತೆಗೆ ಕನ್ನಡ ಭಾಷಾ ಪ್ರೌಢಿಮೆ, ಶಬ್ದಕೋಶ ಹಾಗೂ ಬರವಣಿಗೆಯ ಕೌಶಲ್ಯಗಳು ಅಭಿವೃದ್ಧಿಯಾಗಲಿವೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ.
ಇದರ ಜೊತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಯಂತ್ರಿಸುವ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಿದ್ದನ್ನು ಅನುಸರಿಸಿ ಈ ಶೈಕ್ಷಣಿಕ ಸುಧಾರಣೆ ಜಾರಿಗೆ ಬಂದಿದೆ. ಈ ಹೊಸ ನಿಯಮವು ಮಕ್ಕಳನ್ನು ಪ್ರಸ್ತುತ ಘಟನೆಗಳೊಂದಿಗೆ ಸಂಪರ್ಕದಲ್ಲಿರಿಸುವುದರ ಜೊತೆಗೆ ಓದುವ ಅಭ್ಯಾಸವನ್ನು ಬೆಳೆಸಲು ಸಹಕಾರಿ ಆಗಲಿದೆ ಎಂದು ಶಿಕ್ಷಣ ಇಲಾಖೆ ವಿಶ್ವಾಸ ವ್ಯಕ್ತಪಡಿಸಿದೆ.

