ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿರುವ ನೌಗಾಮ್ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ಶುಕ್ರವಾರ ರಾತ್ರಿ ಸಂಭವಿಸಿದೆ. ಅವಘಡದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ. ಭಯೋತ್ಪಾದಕರಿಂದ ವಶಪಡಿಸಿಕೊಂಡಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಿಧಿವಿಜ್ಞಾನ ತಜ್ಞರು ಮತ್ತು ಪೊಲೀಸರು ಪರಿಶೀಲಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮೃತಪಟ್ಟವರಲ್ಲಿ ಹೆಚ್ಚಿನವರು ಪೊಲೀಸ್ ಸಿಬ್ಬಂದಿ ಮತ್ತು ವಿಧಿವಿಜ್ಞಾನ ಅಧಿಕಾರಿಗಳಾಗಿದ್ದಾರೆ. ಶ್ರೀನಗರ ಸರ್ಕಾರದ ಇಬ್ಬರು ಅಧಿಕಾರಿಗಳು, ಓರ್ವ ನೈಬ್ ತಹಶೀಲ್ದಾರ್ ಕೂಡ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಾಳುಗಳನ್ನು ಸೇನೆಯ 92 ಬೇಸ್ ಆಸ್ಪತ್ರೆ ಮತ್ತು ಶೇರ್-ಇ-ಕಾಶ್ಮೀರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಇಡೀ ಪ್ರದೇಶವನ್ನು ಸುತ್ತುವರಿದಿದ್ದಾರೆ.

ಇತ್ತೀಚೆಗೆ ಇದೇ ನೌಗಾಮ್ ಠಾಣೆಯ ಪೊಲೀಸರು ಜೈಶ್ – ಎ – ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಭಯೋತ್ಪಾದಕ ಜಾಲವನ್ನು ಬೇಧಿಸಿದ್ದರು. ಈ ಜಾಲವು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ‘ಹೊರಗಿನವರ’ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿ ಪೋಸ್ಟರ್ಗಳನ್ನು ಅಂಟಿಸಿತ್ತು. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಅಕ್ಟೋಬರ್ 27 ರಂದು ಡಾ. ಆದೀಲ್ ಅಹ್ಮದ್ ರಾಥರ್ನನ್ನು ಬಂಧಿಸಿದ್ದರು. ಆತನ ಬಂಧನದಿಂದಾಗಿ ಪಾಕಿಸ್ತಾನ ಮತ್ತು ಇತರ ದೇಶಗಳಿಂದ ಕಾರ್ಯನಿರ್ವಹಿಸುತ್ತಿದ್ದ ವಿದೇಶಿ ಹ್ಯಾಂಡ್ಲರ್ಗಳ ಸಂಪರ್ಕದಲ್ಲಿದ್ದ ವೈದ್ಯರು ಮತ್ತು ವಿದ್ಯಾರ್ಥಿಗಳ ಜಾಲ ಪತ್ತೆಯಾಗಿತ್ತು. ಆತನ ವಿಚಾರಣೆ ವೇಳೆ ಹರಿಯಾಣದ ಫರಿದಾಬಾದ್ನಲ್ಲಿ ಕೆಲಸ ಮಾಡುತ್ತಿದ್ದ ಮತ್ತೊಬ್ಬ ವೈದ್ಯ ಡಾ. ಮುಜಮ್ಮಿಲ್ ಶಕೀಲ್ನ ಹೆಸರು ಬಹಿರಂಗವಾಗಿತ್ತು. ಶಕೀಲ್ನ ಮನೆ ಮೇಲೆ ದಾಳಿ ನಡೆಸಿದಾಗ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ಪೊಲೀಸರ ಜಂಟಿ ತಂಡವು ಸುಮಾರು 3,000 ಕೆ.ಜಿ. ಅಮೋನಿಯಂ ನೈಟ್ರೇಟ್ ಅನ್ನು ವಶಪಡಿಸಿಕೊಂಡಿತ್ತು. ಈ ಜಾಲವು, ಇತ್ತೀಚೆಗೆ ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಬಾಂಬ್ ಸ್ಫೋಟದ ಹಿಂದೆ ಇದೆ ಎಂದು ತಿಳಿದುಬಂದಿದೆ. ಆ ಸ್ಫೋಟದಲ್ಲಿ 13 ಜನರು ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ತನಿಖಾ ಸಂಸ್ಥೆಗಳ ಪ್ರಕಾರ, ಕಾಶ್ಮೀರದಲ್ಲಿ ಭಾರೀ ಪ್ರಮಾಣದ ರಾಸಾಯನಿಕಗಳು ವಶವಾದ ಕಾರಣ ಭಯೋತ್ಪಾದಕರು ಆತಂಕಗೊಂಡು, ದೆಹಲಿ ಸ್ಫೋಟಕ್ಕೆ ಬಳಸಿದ ಸುಧಾರಿತ ಸ್ಫೋಟಕ ಸಾಧನವನ್ನು ಅವಸರದಲ್ಲಿ ಮತ್ತು ಅಸಮರ್ಪಕವಾಗಿ ಜೋಡಿಸಿದ್ದರು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

