ಮಂಗಳೂರು, ಡಿ.3 : ಉಡುಪಿ ಅಥವಾ ಮಂಗಳೂರಿನಲ್ಲಿ ಕೇರಳದ ಶಿವಗಿರಿಯ ಶಾಖಾ ಮಠವನ್ನು ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಗಿರಿ ಮಠದಿಂದ ಮನವಿ ಮಾಡಿದಂತೆ ಐದು ಎಕರೆ ಭೂಮಿಗೆ ಬಿ.ಕೆ.ಹರಿಪ್ರಸಾದ್ ಮತ್ತು ಇತರ ನಾಯಕರು ಭೂಮಿ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆಯಲ್ಲೇ ಹೇಳಿದರು. ನಾರಾಯಣ ಗುರು ಮತ್ತು ಗಾಂಧಿ ಸಮಾಗಮ ಬಗ್ಗೆ ಪ್ರಧಾನ ಸಂದೇಶ ಭಾಷಣ ಮಾಡಿದ ಲೋಕಸಭೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧ್ಯಕ್ಷ ಕೆ. ಸಿ. ವೇಣುಗೋಪಾಲ್, ಬಸವಣ್ಣ, ಮಹಾತ್ಮಗಾಂಧಿ, ನಾರಾಯಣ ಗುರು ತತ್ವಗಳು ದೇಶದ ಸಂವಿಧಾನದಲ್ಲಿ ಅಡಕವಾಗಿವೆ. ಇಂಥ ಮಹಾನ್ ಸಂವಿಧಾನವೇ ಈಗ ಬೆದರಿಕೆ ಎದುರಿಸುತ್ತಿದೆ. ಗಾಂಧಿ, ಗುರುಗಳು ದಶಕಗಳ ಹಿಂದೆ ಎದುರಿಸಿದ ಬೆದರಿಕೆಯಂತೆಯೇ ಸಂವಿಧಾನ ಬೆದರಿಕೆ ಎದುರಿಸುತ್ತಿರುವುದು ದುರದೃಷ್ಟ. ಈ ಮಹಾನ್ ನಾಯಕರ ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ಮುಂದುವರಿಯಬೇಕಿದೆ ಎಂದರು. ಒಂದೇ ದೇಶ ಒಂದೇ ಮತ ಒಂದೇ ದೇವರು ಎಂಬ ಸಿದ್ದಾಂತ ಪಸರಿಸಿದವರು ನಾರಾಯಣ ಗುರುಗಳು. ಸತ್ಯ ಅಹಿಂಸೆಯ ಸಂದೇಶ ಗಾಂಧಿ ಅವರದು. 1925ರಲ್ಲಿ ಈ ಇಬ್ಬರು ಮಹಾನ್ ನಾಯಕರು ಸಂವಾದ ನಡೆಸಿದ್ದು ಐತಿಹಾಸಿಕ ದಾಖಲೆಯಾಗಿ ಉಳಿದಿದೆ. ಆ ಕಾಲದಲ್ಲಿ ಒಂದೆಡೆ ಸ್ವಾತಂತ್ರ್ಯ ಹೋರಾಟ ಇದ್ದರೆ ಇನ್ನೊಂದೆಡೆ ಅಸ್ಪೃಶ್ಯತೆ, ಅಸಮಾನತೆ ತಾಂಡವ ಆಡುತಿತ್ತು. ಈ ಸಂವಾದ ದೇಶದ ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿತ್ತು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಇತಿಹಾಸವನ್ನು ಭವಿಷ್ಯಕ್ಕೆ ತಿಳಿಸುವ ಈ ಕಾರ್ಯಕ್ರಮ ನಡೆದ ಈ ಮೈದಾನಕ್ಕೆ ಗುರು-ಗಾಂಧಿ ಮೈದಾನ ಎಂದು ನಾಮಕರಣಗೊಳಿಸಿ ಪಾರ್ಕ್, ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದರು. ನನ್ನ ಪ್ರಕಾರ ಅಭಿವೃದ್ಧಿ ಎಂದರೆ ರಸ್ತೆ, ಸೇತುವೆ ನಿರ್ಮಾಣ ಮಾತ್ರ ಅಲ್ಲ ನನ್ನ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಮ್, ದಲಿತರು, ಕ್ರೈಸ್ತರು, ಶ್ರೀಮಂತರು, ಶೋಷಿತರ ಮಕ್ಕಳು ಕೈ ಕೈ ಹಿಡಿದು ಜೊತೆಯಾಗಿ ಸಾಗುವ ವಾತಾವರಣ ನಿರ್ಮಾಣ ಅದಾಗ ಅಭಿವೃದ್ಧಿ ಆದಂತೆ ಎಂದವರು ಹೇಳಿದರು.
ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾತನಾಡಿದ ಶತಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, 2013ರಲ್ಲಿ ಮಂಗಳೂರು ವಿವಿಯಲ್ಲಿ ನಾರಾಯಣ ಗುರುಗಳ ಪೀಠ ಸ್ಥಾಪನೆಗೆ ಮನವಿ ಮಾಡಿ ಹಿಂದುಳಿದ ನಾಯಕರು ಮುಂದೆ ಬಂದು ನಾರಾಯಣ ಗುರು ಪೀಠ ಸ್ಥಾಪನೆಗೆ ಮುಂದಾದ ಸಂದರ್ಭ ನನ್ನ ಎಂಎಲ್ಸಿ ನಿಧಿಯಿಂದ 35 ಲಕ್ಷ ರೂ. ಒದಗಿಸಿದ್ದೆ. ಸಂಸದರಾಗಿದ್ದ ಸಂದರ್ಭ ನಳಿನ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾಗಿದ್ದ ಹರೀಶ್ ಕುಮಾರ್ ತಲಾ 10 ಲಕ್ಷ ರೂ. ಅನುದಾನ ಒದಗಿಸಿದ್ದರು. ಅಧ್ಯಯನ ಪೀಠದ ಕಾರ್ಯಕ್ಕೆ ಇನ್ನಷ್ಟು ಅನುದಾನ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದಾಗ ಎರಡು ಕೋಟಿ ರೂ. ಅನುದಾನ ಒದಗಿಸಿದ್ದರು. ಇದೀಗ ಶಿವಗಿರಿ ಮಠದ ಶಾಖೆ ಸ್ಥಾಪಿಸಲು ಐದು ಎಕರೆ ಜಾಗ ಗುರುತಿಸುವಂತೆ ಮುಖ್ಯ ಮಂತ್ರಿ ಹೇಳಿದ್ದಾರೆ ಎಂದರು.

ಶಿವಗಿರಿ ಮಠದ ಕಾರ್ಯದರ್ಶಿ ಶುಭಗಾನಂದ ಸ್ವಾಮೀಜಿ, ಗೃಹಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಸತಿ ಮತ್ತು ವಕ್ಸ್ ಸಚಿವ ಝಮೀರ್ ಅಹ್ಮದ್, ಮಾಜಿ ಸಚಿವ ಜನಾರ್ದನ ಪೂಜಾರಿ. ಶಾಸಕರಾದ ಹರೀಶ್ ಪೂಂಜಾ, ರಾಜೇಶ್ ನಾಯ್ಕ, ಅಶೋಕ್ ರೈ, ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಕಾಂಗ್ರೆಸ್ ನಾಯಕರಾದ ಹರೀಶ್ ಕುಮಾರ್, ಪಿವಿ ಮೋಹನ್, ಎಂ.ಎ.ಗಫೂರ್, ಪದ್ಮರಾಜ್, ಶಶಿಧರ್ ಹೆಗ್ಡೆ, ರಕ್ಷಿತ್ ಶಿವರಾಂ, ಪ್ರತಿಭಾ ಕುಳಾಯಿ, ವಿಶ್ವಾಸ್ ಕುಮಾರ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.

