ಹೊಸದಿಲ್ಲಿ, ಮಾ. 24 : ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿ ಪರಿಶಿಷ್ಟ ಜಾತಿ ಸ್ಥಾನಮಾನಕ್ಕೆ ಅರ್ಹನಾಗಿರುವುದಿಲ್ಲ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ಪಡೆಯುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯುವ ಹಕ್ಕನ್ನು ಹೊಂದಿರುತ್ತಾರೆ ಎಂದು ನ್ಯಾಯಾಲಯವು ತೀರ್ಪು ನೀಡಿದೆ.
ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಆ ನಂಬಿಕೆಯನ್ನು ಸಕ್ರಿಯವಾಗಿ ಅನುಸರಿಸುವ ವ್ಯಕ್ತಿಯನ್ನು ಎಸ್ಸಿ ಸಮುದಾಯದ ಸದಸ್ಯ ಎಂದು ಗುರುತಿಸಲು ಸಾಧ್ಯವಿಲ್ಲ ಎಂಬ ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಮತ್ತು ಎನ್ವಿ ಅಂಜಾರಿಯಾ ಅವರ ಪೀಠವು ಎತ್ತಿಹಿಡಿದಿದೆ. ಆಂಧ್ರಪ್ರದೇಶ ಹೈಕೋರ್ಟ್ನ ಮೇ 2025 ರ ತೀರ್ಪನ್ನು ಪ್ರಶ್ನಿಸಿ, ಕೆಲವು ವ್ಯಕ್ತಿಗಳಿಂದ ಜಾತಿ ಆಧಾರಿತ ತಾರತಮ್ಯ ಮತ್ತು ನಿಂದನೆಯನ್ನು ಎದುರಿಸಿದ್ದಾರೆ ಎಂದು ಆರೋಪಿಸಿ, ಪಾದ್ರಿ ಚಿಂತಾಡ ಆನಂದ್ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಈ ತೀರ್ಪು ಬಂದಿದೆ.
ಪಾದ್ರಿಯಿಂದ ದೂರು ಸಲ್ಲಿಕೆ
ತನ್ನ ಗ್ರಾಮದಲ್ಲಿ ಭಾನುವಾರ ಪ್ರಾರ್ಥನೆ ನಡೆಸುತ್ತಿದ್ದ ಪಾದ್ರಿ ಆನಂದ್, ಅಕ್ಕಲ ರಾಮಿರೆಡ್ಡಿ ಮತ್ತು ಇತರರು ತಮ್ಮ ಮೇಲೆ ಪದೇ ಪದೇ ಹಲ್ಲೆ ನಡೆಸಿದ್ದಾರೆ. ತನಗೆ ಮತ್ತು ತನ್ನ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಮತ್ತು ಜಾತಿ ಆಧಾರದ ಮೇಲೆ ನಿಂದಿಸಿದ್ದಾರೆ ಎಂದು ಆರೋಪಿಸಿದರು. ಆನಂದ್ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದರು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪಾಸ್ಟರ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಅವರಿಗೆ ಈ ಕಾಯ್ದೆಯಡಿ ರಕ್ಷಣೆ ಸಿಗುವುದಿಲ್ಲ ಎಂಬುದು ಅವರ ವಾದವಾಗಿತ್ತು.
ಎಫ್ಐಆರ್ ರದ್ದು
ತನಿಖೆ ಪೂರ್ಣಗೊಂಡು ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ನಂತರ, ಆನಂದ್ ಆಂಧ್ರಪ್ರದೇಶ ಹೈಕೋರ್ಟ್ ಮೊರೆ ಹೋಗಿ ಆರೋಪಗಳನ್ನು ರದ್ದುಗೊಳಿಸುವಂತೆ ಕೋರಿದರು. ದೂರುದಾರರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ತಮ್ಮ ಎಸ್ಸಿ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ ಮತ್ತು ಆದ್ದರಿಂದ ಎಸ್ಸಿ/ಎಸ್ಟಿ ಕಾಯ್ದೆಯಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎನ್ ಹರಿನಾಥ್ ಅವರು ಎಫ್ಐಆರ್ ಅನ್ನು ರದ್ದುಗೊಳಿಸಿದರು.
ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ:
ಈ ಹಿಂದೆ ಆಂಧ್ರಪ್ರದೇಶ ಹೈಕೋರ್ಟ್, “ಕ್ರೈಸ್ತ ಧರ್ಮದಲ್ಲಿ ಜಾತಿ ವ್ಯವಸ್ಥೆ ಇಲ್ಲದ ಕಾರಣ ಮತಾಂತರಗೊಂಡ ವ್ಯಕ್ತಿಯು ಎಸ್ಸಿ ಸವಲತ್ತು ಪಡೆಯಲು ಅರ್ಹನಲ್ಲ” ಎಂದು ಹೇಳಿ ಎಫ್ಐಆರ್ ರದ್ದುಗೊಳಿಸಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್ ಈಗ ಎತ್ತಿ ಹಿಡಿದಿದೆ.
ಜಾತಿ ಪ್ರಮಾಣಪತ್ರವಿದ್ದರೂ ಲಾಭವಿಲ್ಲ:
ವ್ಯಕ್ತಿಯೊಬ್ಬರು ಕ್ರೈಸ್ತ ಧರ್ಮವನ್ನು ಪಾಲಿಸುತ್ತಿದ್ದು, ಚರ್ಚ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರೆ, ಅವರ ಬಳಿ ಎಸ್ಸಿ ಪ್ರಮಾಣಪತ್ರವಿದ್ದರೂ ಸಹ ಅವರು ಎಸ್ಸಿ ಸವಲತ್ತುಗಳನ್ನು ಅಥವಾ ಎಸ್ಸಿ/ಎಸ್ಟಿ ಕಾಯ್ದೆಯ ರಕ್ಷಣೆಯನ್ನು ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಒಂದು ವೇಳೆ ಮತಾಂತರಗೊಂಡ ವ್ಯಕ್ತಿ ಮತ್ತೆ ತನ್ನ ಮೂಲ ಧರ್ಮಕ್ಕೆ ಅಂದರೆ ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಕ್ಕೆ ಮರಳಿ ಬಂದು, ಸಮುದಾಯವು ಅವರನ್ನು ಒಪ್ಪಿಕೊಂಡರೆ ಮಾತ್ರ ಅಂತಹವರಿಗೆ ಮತ್ತೆ ಎಸ್ಸಿ ಸ್ಥಾನಮಾನ ಸಿಗುವ ಸಾಧ್ಯತೆ ಇರುತ್ತದೆ. ಈ ತೀರ್ಪು ದೇಶಾದ್ಯಂತ ಮತಾಂತರಗೊಂಡ ದಲಿತ ಕ್ರೈಸ್ತರು ಮತ್ತು ಮುಸ್ಲಿಮರಿಗೆ ಎಸ್ಸಿ ಮೀಸಲಾತಿ ನೀಡಬೇಕೆಂದು ನಡೆಯುತ್ತಿರುವ ಸುದೀರ್ಘ ಚರ್ಚೆಯ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ.

