ಬೆಂಗಳೂರು, ಏ. 11 : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನೋರಾಯನಪಾಳ್ಯದ ನಿವಾಸಿ ತನುಶ್ರೀ (18) ಆತಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ತನುಶ್ರೀ ಅನುತ್ತೀರ್ಣಗೊಂಡಿದ್ದಳು. ಇದರಿಂದ ನೊಂದು ಮನೆಯಲ್ಲಿ ಫ್ಯಾನಿಗೆ ವೆಲ್ನಿಂದ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಳು. ಇದಾದ ಕೆಲವು ಹೊತ್ತಿನ ಬಳಿಕ ಬಳಿಕ ಈಕೆಯ ತಾಯಿ ಅಶಾ ಅವರು ಕೊಠಡಿಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಕೂಡಲೇ ಸ್ಥಳೀಯರ ಸಹಾಯದಿಂದ ನೇಣಿನ ಕುಣಿಕೆಯಿಂದ ಮಗಳನ್ನು ಇಳಿಸಲಾಗಿದೆ. ವಿಚಾರ ತಿಳಿದು ಹೆಬ್ಬಾಳ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ. ಘಟನೆ ಕುರಿತು ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ಅಲ್ಲ, ಕೊಲೆ : ಸಂಬಂಧಿಕರ ದೂರು
ತನುಶ್ರೀ ಆತ್ಮಹತ್ಯೆ ಬಗ್ಗೆ ಆಕೆಯ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ತನುಶ್ರೀ ಆತ್ಮಹತ್ಯೆ ಮಾಡಿಕೊಳ್ಳುವಂತಹ ಹುಡುಗಿ ಅಲ್ಲ. ಕೃತ್ಯ ಬೆಳಕಿಗೆ ಬಂದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡದೇ, ನಾಲೈದು ಸ್ಥಳೀಯರ ಸಹಾಯದಿಂದ ಆಕೆಯನ್ನು ನೇಣಿನ ಕುಣಿಕೆಯಿಂದ ಇಳಿಸಲಾಗಿದೆ. ಆಕೆಯನ್ನು ಕೊಲೆ ಮಾಡಿ ನೇಣಿಗೆ ಹಾಕಿರುವ ಶಂಕೆ ವ್ಯಕ್ತವಾಗಿದೆ ಎಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಎಲ್ಲ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಕೊಲೆ ಎಂಬುದು ಗೊತ್ತಾಗಿದೆ.
ಆತ್ಮಹತ್ಯೆ ಪರಿಹಾರವಲ್ಲ
ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಸಮಸ್ಯೆಗಳು ಶಾಶ್ವತವಾಗಿ ಜೊತೆ ಇರುವುದೂ ಇಲ್ಲ ! ಹೀಗಾಗಿ, ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಯಮದಿಂದ ನಿರ್ಧಾರ ತೆಗೆದುಕೊಳ್ಳಿ. ಅನಿವಾರ್ಯತೆ ಇದ್ದಲ್ಲಿ ಸೂಕ್ತ ಮಾನಸಿಕ ತಜ್ಞರ ಸಲಹೆಗಳನ್ನು ಪಡೆದುಕೊಳ್ಳಿ

