ಬೆಂಗಳೂರು, ಜು. 31 : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ಖಂಡಿಸಿ ಹಾಗೂ ರಾಜ್ಯದ ಹಿತರಕ್ಷಣೆಗಾಗಿ ಆಗಸ್ಟ್ 13 ರಂದು(ಗುರುವಾರ) ‘ಕರ್ನಾಟಕ ಬಂದ್’ ನಡೆಸಲಾಗುತ್ತಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಣೆ ಮಾಡಿದ್ದಾರೆ.
ಕಾವೇರಿ ವಿಚಾರದಲ್ಲಿ ಮುಂದಿನ ಪ್ರಮುಖ ಹೋರಾಟಗಳ ರೂಪುರೇಷೆ ಸಿದ್ಧಪಡಿಸುವ ನಿಟ್ಟಿನಲ್ಲಿ ವಾಟಾಳ್ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿವಿಧ ಕನ್ನಡಪರ ಸಂಘಟನೆಗಳ ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯದ ನೇತೃತ್ವದಲ್ಲಿ ಮಹತ್ವದ ತುರ್ತು ಸಭೆಯನ್ನು ನಗರದ ವುಡ್ ಲ್ಯಾಂಡ್ ಹೋಟೆಲ್ನಲ್ಲಿ ನಡೆಸಲಾಯಿತು. ಸಭೆಯ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್ “ಆಗಸ್ಟ್ 13 ರಂದು(ಗುರುವಾರ) ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ವರೆಗೆ ಕರ್ನಾಟಕ ಬಂದ್ ನಡೆಸಲು ತೀರ್ಮಾನ ಮಾಡಿದ್ದೇವೆ” ಎಂದು ತಿಳಿಸಿದರು.
ಕಾವೇರಿ ನೀರು ನಿಯಂತ್ರಣ ಮಂಡಳಿಯು (ಸಿಡಬ್ಲೂಆರ್ಸಿ) ರಾಜ್ಯದ ಕೆಆರ್ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ಪ್ರತಿ ದಿನ 3,500 ಕ್ಯೂಸೆಕ್ 15 ದಿನಗಳ ಕಾಲ ಒಟ್ಟು ಸುಮಾರು 6 ಟಿಎಂಸಿ ನೀರು ಹರಿಸುವಂತೆ ಆದೇಶಿಸಿದೆ. ಈ ಆದೇಶದಿಂದಾಗಿ ನಾಡಿನ ಅಪಾರ ರೈತರು, ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ರಾಜ್ಯದಲ್ಲಿ ಈಗಾಗಲೇ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಬರಗಾಲದ ಲಕ್ಷಣ ಕಾಣಿಸುತ್ತಿದೆ. ಇಂತಹ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಹೋರಾಟಕ್ಕೆ ಮುಂದಾಗಿವೆ.
ಹೋರಾಟದ ಸಭೆಯಲ್ಲಿ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆಯ ರಾಜ್ಯಾದ್ಯಕ್ಷ ಕೆ.ಆರ್. ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ನಾಯಕರಾದ ಶಿವರಾಮೇಗೌಡ ಹಾಗೂ ಪ್ರವೀಣ್ಕುಮಾರ್ ಶೆಟ್ಟಿ, ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್ ಹಾಗೂ ಎಚ್.ವಿ. ಗಿರೀಶ್ ಗೌಡ ಸೇರಿದಂತೆ ವಿವಿಧ ಕನ್ನಡಪರ ಸಂಘ-ಸಂಸ್ಥೆಗಳ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.




