ಕೇರಳ, ಜು. 7 : ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ನಿರಂತರ ಮಳೆಯಿಂದ ಸುರಿದ ಪರಿಣಾಮ ಮೆಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ರಸ್ತೆ ಕಾಮಗಾರಿ ಸ್ಥಳದ ಬಳಿ ಭೀಕರ ಭೂಕುಸಿತ ಸಂಭವಿಸಿದ್ದು, ಹಲವು ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮಣ್ಣಿನಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಈವರೆಗೆ 6 ಜನರನ್ನು ರಕ್ಷಿಸಲಾಗಿದೆ. ಅವರಲ್ಲಿ ಇಬ್ಬರು ಸಾವನ್ನಪ್ಪಿರುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ. ಮೀನಾಕ್ಷಿ ಸೇತುವೆ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಂದು ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಯನಾಡಿನಲ್ಲಿ ಕಳೆದ 24ಗಂಟೆಗಳಲ್ಲಿ ಭಾರೀ ಮಳೆಯಾಗಿದ್ದು, ಇದರ ಪರಿಣಾಮ ಭೂಕುಸಿತ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಗುಡ್ಡ ಕುಸಿತದ ವೇಳೆ ವಾಹನ ಸವಾರರು, ಜನರು ಅವಶೇಷಗಳಡಿ ಸಿಲುಕಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಘಟನಾ ಸ್ಥಳಕ್ಕೆ ರಕ್ಷಣಾ ತಂಡವನ್ನು ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದಾಗಿ ಸಚಿವ ಟಿ.ಸಿದ್ದಿಖಿ ತಿಳಿಸಿದ್ದು, ಭೂಕುಸಿತದಿಂದಾದ ಸಾವು-ನೋವಿನ ಬಗ್ಗೆ ಇನ್ನಷ್ಟೇ ನಿಖರ ಮಾಹಿತಿ ತಿಳಿದು ಬರಬೇಕಾಗಿದೆ ಎಂದು ತಿಳಿಸಿದ್ದಾರೆ.



