ಕುಂದಾಪುರ, ಜೂ. 12 : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ಗಣ್ಯರ ಆಗಮನ ಹಿನ್ನೆಲೆ ಉಡುಪಿ ಜಿಲ್ಲಾಪೊಲೀಸ್ ವತಿಯಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಮಧ್ಯಾಹ್ನ 3: 35ರ ಸುಮಾರಿಗೆ ವಿಜಯ್ ತಲುಪಿದರು. ಅವರನ್ನು ದೇವಳದ ಆಡಳಿತ ಮಂಡಳಿಯವರು, ಅಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು.
ಸಿಎಂ ಸಂಚರಿಸುವ ಮಾರ್ಗದುದ್ದಕ್ಕೂ ಹಾಗೂ ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದರು. ತಮಿಳುನಾಡು ಮುಖ್ಯಮಂತ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗಿದರು. ಯಾವುದೇ ಸಾರ್ವಜನಿಕ ಭೇಟಿ ಅಥವಾ ಕಾರ್ಯಕ್ರಮಗಳನ್ನು ಆಯೋಜಿಸಿರಲಿಲ್ಲ.
ದಳಪತಿಗೆ ಜೈ ಎಂದ ಅಭಿಮಾನಿಗಳು
ವಿಜಯ್ ಆಗಮನದ ಹಿನ್ನೆಲೆ ದೇವಾಲಯದ ಹೊರಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೋಲೀಸರು ಹರಸಾಹಸ ಪಟ್ಟರು. ಅಭಿಮಾನಿಗಳು ವಿಜಯ್ ಕಂಡು ದಳಪತಿಗೆ ಜೈ ಎಂದು ಘೋಷಣೆ ಕೂಗಿದರು.
ಸಾರ್ವಜನಿಕರಿಗೆ ಕೆಲವೊಂದು ಅನಾನುಕೂಲತೆಗಳು ಉಂಟಾಗುವ ಸಾಧ್ಯತೆ ಹಿನ್ನೆಲೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಕ್ತರು ದರ್ಶನಕ್ಕೆ ಆಗಮಿಸುವುದನ್ನು ಸಾಧ್ಯವಾದರೆ ತಪ್ಪಿಸುವಂತೆ ಪೊಲೀಸರು ಸಲಹೆ ನೀಡಿದ್ದರು. ಆದರೂ ಭಕ್ತಾದಿಗಳಿಗೆ ಯಾವುದೇ ಸಮಯದಲ್ಲೂ ದೇವಸ್ಥಾನ ಪ್ರವೇಶ ನಿಷೇಧವಿಲ್ಲ ಎಂದು ಸ್ಪಷ್ಟಪಡಿಸಿದ್ದರು.


