ಕೋಲ್ಕತ್ತಾ, ಮೇ. 04 : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮತ್ತು ಫಲಿತಾಂಶ ಪ್ರಕಟಣೆಯ ನಂತರ ರಾಜ್ಯದ ಯಾವುದೇ ಭಾಗದಲ್ಲೂ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳು ವಿಜಯೋತ್ಸವ ಮೆರವಣಿಗೆ ಮತ್ತು ರ್ಯಾಲಿಗಳನ್ನು ನಡೆಸದಂತೆ ಭಾರತೀಯ ಚುನಾವಣಾ ಆಯೋಗ ಕಟ್ಟುನಿಟ್ಟಿನ ನಿಷೇಧ ಹೇರಿದೆ.
ಇಂದು ಮತ ಎಣಿಕೆ ಕಾರ್ಯ ಆರಂಭವಾಗುತ್ತಿದ್ದಂತೆಯೇ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶೇಷ ಚುನಾವಣಾ ವೀಕ್ಷಕ ಸುಬ್ರತಾ ಗುಪ್ತಾ ಅವರು, “ಫಲಿತಾಂಶ ಪ್ರಕಟವಾದ ನಂತರ ರಾಜ್ಯದ ಯಾವುದೇ ಮೂಲೆಯಲ್ಲೂ ಅಭ್ಯರ್ಥಿಗಳ ಗೆಲುವನ್ನು ಸಂಭ್ರಮಿಸುವ ಮೆರವಣಿಗೆಗಳನ್ನು ನಡೆಸಲು ಅವಕಾಶವಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.
ಚುನಾವಣೆ ಮತ್ತು ಮತ ಎಣಿಕೆ ನಂತರ ಉಂಟಾಗಬಹುದಾದ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಚುನಾವಣಾ ಆಯೋಗವು ಈ ಕಠಿಣ ನಿರ್ಧಾರ ಕೈಗೊಂಡಿದೆ.

