ಕೋಲ್ಕತ್ತಾ, ಮೇ 09 : ಪಶ್ಚಿಮ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ, ಬಂಗಾಳ ನೆಲದ ಬಿಜೆಪಿಯ ಪ್ರಥಮ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಶನಿವಾರ (ಮೇ 09) ಪ್ರಮಾಣ ವಚನ ಸ್ವೀಕರಿಸಿದರು. ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾರು ಸುವೇಂದು ಅಧಿಕಾರಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೇರಿದಂತೆ ಹಿರಿಯ ಎನ್ ಡಿಎ ನಾಯಕರು ಆಗಮಿಸಿದ್ದರು. ಹಲವಾರು ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಸುವೇಂದು ಅಧಿಕಾರಿ ಅವರು ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಬಿಜೆಪಿ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಅವರನ್ನು ವೇದಿಕೆಗೆ ಸ್ವಾಗತಿಸಿದರು. ಸರ್ಕಾರ್ ಅವರ ಪಾದಗಳನ್ನು ಮುಟ್ಟಿದ ಮೋದಿ ಅವರನ್ನು ಅಪ್ಪಿಕೊಂಡರು. ಸರ್ಕಾರ್ ಅವರು ಪಶ್ಚಿಮ ಬಂಗಾಳದ ಅತ್ಯಂತ ಹಳೆಯ ಬಿಜೆಪಿ ಕಾರ್ಯಕರ್ತರಲ್ಲಿ ಒಬ್ಬರು.

